ದಾವಣಗೆರೆ: ರಾಜ್ಯ ರಾಜಕಾರಣಕ್ಕೆ ಪ್ರವೇಶಿಸಲು ಸಂಪೂರ್ಣ ಸಿದ್ಧರಾಗಿರುವುದಾಗಿ ಪ್ರಕಟಿಸಿರುವ ಮಾಜಿ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಡಾ. ಜಿ. ಎಂ. ಸಿದ್ದೇಶ್ವರ ಇನ್ಮುಂದೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಮತ್ತೊಮ್ಮೆ ಘೋಷಿಸಿದ್ದಾರೆ.
ಜಿಎಂಐಟಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪಕ್ಷದಲ್ಲಿ ವಯಸ್ಸಿನ ನಿರ್ಬಂಧ ಇಲ್ಲ. ಪಕ್ಷದ ಹೈಕಮಾಂಡ್ ಟಿಕೆಟ್ ಕೊಟ್ಟರೆ ರಾಜ್ಯದ ವಿಧಾನಸಭೆ ಯಾವ ಕ್ಷೇತ್ರದಲ್ಲಾದರೂ ಸ್ಪರ್ಧೆ ಮಾಡಲು ಸಿದ್ದನಿದ್ದೇನೆ ಎಂದು ತಿಳಿಸಿದರು.
ರಾಜ್ಯ ರಾಜಕಾರಣಕ್ಕೆ ಸಿದ್ಧತೆ: ಮುಂಬರುವ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ತಮಗೆ ಆಸಕ್ತಿಯಿದ್ದು, ಪಕ್ಷದ ಹೈಕಮಾಂಡ್ ಮತ್ತು ರಾಷ್ಟ್ರೀಯ ನಾಯಕರು ಸೂಚಿಸಿದರೆ ದಾವಣಗೆರೆ ಅಥವಾ ರಾಜ್ಯದ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧ ಎಂದಿದ್ದಾರೆ.
ಲೋಕಸಭೆಗೆ ಸ್ಪರ್ಧಿಸುವುದಿಲ್ಲ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಕುಟುಂಬದಿಂದ ಪತ್ನಿ ಗಾಯತ್ರಿ ಸಿದ್ದೇಶ್ವರ, ಜಿ. ಎಂ. ಲಿಂಗರಾಜ್ ಅಥವಾ ಅನಿತ್ ಅವರಿಗೆ ಹೈಕಮಾಂಡ್ ಟಿಕೆಟ್ ನೀಡಿದರೆ ಅವರು ಕಣಕ್ಕಿಳಿಯಲಿದ್ದಾರೆ ಎಂದರು.
ಆರೋಗ್ಯ ಸುಧಾರಣೆ: ಕಳೆದ ಲೋಕಸಭೆ ಚುನಾವಣೆಯ ವೇಳೆಗೆ ತೀವ್ರ ಅನಾರೋಗ್ಯದ ಕಾರಣದಿಂದಾಗಿ ಹೈಡೋಸ್ ಇಂಜೆಕ್ಷನ್ಗಳ ಚಿಕಿತ್ಸೆ ಪಡೆಯಬೇಕಾಯಿತು. ಇದರಿಂದಾಗಿ 8 ಕ್ಷೇತ್ರಗಳಲ್ಲೂ ಪ್ರಚಾರ ನಡೆಸಲು ಸಾಧ್ಯವಾಗಿರಲಿಲ್ಲ. ಆದರೆ ಈಗ ತಮ್ಮ ಆರೋಗ್ಯ ಸುಧಾರಿಸಿದ್ದು, ಸಂಪೂರ್ಣವಾಗಿ ಫಿಟ್ ಆಗಿದ್ದೇನೆ. ಸಣ್ಣ ಪ್ರಮಾಣದ ಕಾಲಿನ ಸಮಸ್ಯೆಗೆ ಕೊಯಮತ್ತೂರಿನಲ್ಲಿ ಚಿಕಿತ್ಸೆ ಪಡೆದು ಬರಲಿದ್ದು, ಚುನಾವಣೆಯ ವೇಳೆಗೆ ಸಿದ್ಧರಾಗುವುದಾಗಿ ತಿಳಿಸಿದರು.
ಪಕ್ಷದ ತೀರ್ಮಾನವೇ ಅಂತಿಮ: ಬಿಜೇಪಿಯಲ್ಲಿ ವಯಸ್ಸಿನ ಮಿತಿ ಕುರಿತು ತಪ್ಪು ಕಲ್ಪನೆಗಳನ್ನು ಹರಡಬೇಡಿ ಎಂದ ಸಿದ್ದೇಶ್ವರ, ಶಿಕಾರಿಪುರದಲ್ಲಿ ಪಕ್ಷದ ರಾಜ್ಯಾಧ್ಯಕ್ಷರೇ ಸ್ಪರ್ಧಿಸಲಿದ್ದಾರೆ. ವರಿಷ್ಠರು ಯಾವ ತೀರ್ಮಾನ ಕೈಗೊಳ್ಳುತ್ತಾರೋ ಅದಕ್ಕೆ ಬದ್ಧನಾಗಿರುತ್ತೇನೆ ಎಂದು ಸ್ಪಷ್ಟಪಡಿಸಿದರು.





Leave a comment