SUDDIKSHANA KANNADA NEWS/ DAVANAGERE/ DATE:06-01-2025
ದಾವಣಗೆರೆ: ಬಹಳ ವರ್ಷಗಳ ತರುವಾಯ ದಾವಣಗೆರೆ ಜಿಲ್ಲೆಯಲ್ಲಿ ಯುಜನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ದಾವಣಗೆರೆ ನಗರದಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ಈ ಸಂದರ್ಭದಲ್ಲಿ ಯುವಕರಿಗೆ ಜಲಸಾಹಸ ಕ್ರೀಡೆಗಳ ಬಗ್ಗೆ ಪರಿಚಯಿಸಬೇಕು ಎಂಬುದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹಾಗೂ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಆಶಯವಾಗಿತ್ತು.
ಈ ಆಶಯಕ್ಕೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಒಲವು ತೋರಿದರು. ಈ ಹಿನ್ನಲೆಯಲ್ಲಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಆಯುಕ್ತರಿಗೆ ಜಲಸಾಹಸ ಕ್ರೀಡೆಗಳನ್ನು ಆಯೋಜಿಸುವಂತೆ ಕೋರಲಾಗಿತ್ತು. ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿ ಕಡಿಮೆ ಅವಧಿಯಲ್ಲಿ ಜನರಲ್ ತಿಮ್ಮಯ್ಯ ಜಲಸಾಹಸ ಅಕಾಡೆಮಿ ವತಿಯಿಂದ ಕುಂದವಾಡ ಕೆರೆಯಲ್ಲಿ ರಾಫ್ಟಿಂಗ್ ಹಾಗೂ ಕಾಯ್ಕಿಂಗ್ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದಾರೆ. ಇದಕ್ಕೆ ಯುವಕರಿಂದ ಉತ್ತಮ ಸ್ಪಂದನೆ ದೊರೆತ ಹಿನ್ನಲೆಯಲ್ಲಿ ಜ.8 ವರೆಗೆ ಕೊಂಡಜ್ಜಿ ಕೆರೆಯಲ್ಲಿ ರಾಫ್ಟಿಂಗ್ ವಿಸ್ತರಿಸಲಾಗಿದೆ.
ಜಿಲ್ಲೆಯ ಯುವಕರು ಕ್ಯೂಆರ್ ಕೋಡ್ ಸ್ಕ್ಯಾನಿಂಗ್ ಮಾಡಿ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಂಡು ಭಾಗವಹಿಸಬಹುದು. ಜ.7 ರಂದು ಕೊಂಡಜ್ಜಿ ಕೆರೆಯಲ್ಲಿ ರಾಫ್ಟಿಂಗ್ ಹಾಗೂ ಕಾಯ್ಕಿಂಗ್ ಇರಲಿದೆ. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಹೇಳಿದರು.
250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ:
ಕುಂದವಾಡ ಕೆರೆಯಲ್ಲಿ ಆಯೋಜಿಸಲಾಗಿರುವ ರಾಫ್ಟಿಂಗ್ ಹಾಗೂ ಕಾಯ್ಕಿಂಗ್ ನಲ್ಲಿ ವಿದ್ಯಾರ್ಥಿಗಳು ಹಾಗೂ ಯುವಕರಿಂದ ಉತ್ತಮ ಸ್ಪಂದನೆ ದೊರೆತಿದೆ. ವಿವಿಧ ಕಾಲೇಜುಗಳಿಂದ ಆಗಮಿಸಿದ ಸ್ಕೌಟ್ಸ್ ಹಾಗೂ ಗೈಡ್ಸ್ ವಿದ್ಯಾರ್ಥಿಗಳು ಸೋಮವಾರ ಮುಂಜಾನೆಯಿಂದಲೇ ತಂಡ ತಂಡವಾಗಿ ಪಾಲ್ಗೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಲೈಫ್ ಜಾಕೇಟ್ ತೊಡುವುದು ಸೇರಿದಂತೆ ಎಲ್ಲ ಮುನ್ನಚ್ಚರಿಕೆ ಕ್ರಮಗಳ ಬಗ್ಗೆ ತಿಳಿಸಿಕೊಡಲಾಗುತ್ತಿದೆ.
ಕಾರ್ಯಕ್ರಮದ ನಿಮಿತ್ತವಾಗಿ 10 ಸಿಂಗಲ್ ಸೀಟರ್ ಕಾಯ್ಕಿಂಗ್ ಬೋಟ್, 7 ಡಬಲ್ ಸೀಟರ್ ಕಾಯ್ಕಿಂಗ್ ಬೋಟ್, 2 ರಾಫ್ಟ್ ಹಾಗೂ ಸಾಕಷ್ಟು ಸಂಖ್ಯೆಯಲ್ಲಿ ಲೈಫ್ ಜಾಕೆಟ್ಗಳನ್ನು ಇರಿಸಲಾಗಿದೆ. 7 ತರಬೇತುದಾರರು ಕಾರ್ಯನಿರ್ವಹಿಸುತ್ತಿದ್ದಾರೆ. ಸುಮಾರು 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ ಎಂದು ಜಲಸಾಹಸ ತರಬೇತುದಾರ ನಾನಾರಾವ್ ತಿಳಿಸಿದರು.
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರಾದ ವಿಜೇತಾ ಹಾಗೂ ಸಂಗಿತಾ ಕುಂದಾವಡ ಕರೆಯಲ್ಲಿ ಕಾಯ್ಕಿಂಗ್ ಮಾಧ್ಯಮಗಳ ಮುಂದೆ ಸಂತಸ ವ್ಯಕ್ತಪಡಿಸಿದರು.