SUDDIKSHANA KANNADA NEWS/ DAVANAGERE/ DATE-08-06-2025
ಬೆಂಗಳೂರು: ಬೆಂಗಳೂರಿನಲ್ಲಿ ಆರ್ ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ತಪ್ಪು ಹೆಜ್ಜೆ ಇಟ್ಟಿಲ್ಲ. ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ತೆಗೆದುಕೊಂಡಿರುವ ಕಾರಣ, ಸರ್ಕಾರಕ್ಕೆ ಮುಜುಗರವಾಗುವ ಪ್ರಶ್ನೆಯಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉತ್ತರಪ್ರದೇಶದ ಕುಂಭಮೇಳದ ಸೇತುವೆ ಬಿದ್ದ ಪ್ರಕರಣದಲ್ಲಿ ಜನರು ಮೃತ್ತಪಟ್ಟ ಸಂದರ್ಭದಲ್ಲಿ ಅಲ್ಲಿನ ಮುಖ್ಯಮಂತ್ರಿಗಳು ರಾಜಿನಾಮೆ ನೀಡಿದರೇ? ಬಿಜೆಪಿ ಹಾಗೂ
ಜೆಡಿಎಸ್ನವರು ಅಲ್ಲಿನ ಮುಖ್ಯಮಂತ್ರಿಗಳ ರಾಜಿನಾಮೆ ಕೇಳಿದರೇ? ಎಂದು ಮರುಪ್ರಶ್ನಿಸಿದರು.
ಸುಹಾಸ್ ಶೆಟ್ಟಿ ಪ್ರಕರಣದಲ್ಲಿ, ತನಿಖೆಯನ್ನು ಎನ್ ಐ ಎಗೆ ವಹಿಸಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಅಡ್ವೋಕೇಟ್ ಜನರಲ್ ಅವರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.
ದಸರಾ ಪೂರ್ವಭಾವಿ ಸಭೆ ಹಾಗೂ ಕೆಡಿಪಿ ಸಭೆಗಳ ಬಗ್ಗೆ ಪ್ರತಿಕ್ರಿಯೆ ನೀಡಿ, ಮೈಸೂರಿನಲ್ಲಿ ಕೆಡಿಪಿ ಹಾಗೂ ದಸರಾ ಸಭೆ ನಡೆಸುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.
ನರೇಗಾ ಹಣವನ್ನು ಸಕಾಲದಲ್ಲಿ ಬಿಡುಗಡೆ ಮಾಡಲಾಗುವುದಿಲ್ಲ. ಎನ್ ಡಿ ಎ ಸರ್ಕಾರದ ಅವಧಿಯಲ್ಲಿ ಕೇಂದ್ರ ಬಯಸಿದಾಗ ರಾಜ್ಯಗಳು ಹಣ ಪಡೆಯಬೇಕಾದ ಪರಿಸ್ಥಿತಿ ಇದೆ ಎಂದರು.