ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಸೋಲನುಭವಿಸಿದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರಾಕರಿಸುತ್ತಿರುವ ಮಮತಾ ಬ್ಯಾನರ್ಜಿ ಅವರ ನಡೆಯನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತೀವ್ರವಾಗಿ ಖಂಡಿಸಿದ್ದಾರೆ.
“ಒಂದು ವೇಳೆ ಮಮತಾ ಬ್ಯಾನರ್ಜಿ ಸ್ವಯಂಪ್ರೇರಿತರಾಗಿ ರಾಜೀನಾಮೆ ನೀಡದಿದ್ದರೆ, ರಾಜ್ಯಪಾಲರು ಕೂಡಲೇ ಅವರನ್ನು ವಜಾಗೊಳಿಸಬೇಕು,” ಎಂದು ಅವರು ಎನ್ಡಿಟಿವಿ (NDTV) ಸಂದರ್ಶನದಲ್ಲಿ ಒತ್ತಾಯಿಸಿದ್ದಾರೆ.
ಸತತ ಮೂರು ಅವಧಿಗೆ ಅಧಿಕಾರ ನಡೆಸಿದ್ದ ತೃಣಮೂಲ ಕಾಂಗ್ರೆಸ್ ಪಕ್ಷವು ಈ ಬಾರಿ ಬಿಜೆಪಿಗೆ ಅಧಿಕಾರ ಬಿಟ್ಟುಕೊಟ್ಟಿದೆ. ಆದರೆ, “ನಾನು ಸೋತಿಲ್ಲ, ಹಾಗಾಗಿ ರಾಜಭವನಕ್ಕೆ ಹೋಗಿ ರಾಜೀನಾಮೆ ನೀಡುವುದಿಲ್ಲ” ಎಂದು ಮಮತಾ ಬ್ಯಾನರ್ಜಿ ಪಟ್ಟು ಹಿಡಿದಿರುವುದು ಸಾಂವಿಧಾನಿಕ ಬಿಕ್ಕಟ್ಟಿಗೆ ಕಾರಣವಾಗಿದೆ.
ಮೇ 7ಕ್ಕೆ ಪ್ರಸ್ತುತ ವಿಧಾನಸಭೆಯ ಅವಧಿ ಮುಕ್ತಾಯಗೊಳ್ಳಲಿದ್ದು, ಅಷ್ಟರೊಳಗೆ ಹೊಸ ಸರ್ಕಾರ ರಚನೆಯಾಗಬೇಕಿದೆ. ಒಂದು ವೇಳೆ ಈ ಹಗ್ಗಜಗ್ಗಾಟ ಮುಂದುವರಿದರೆ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುವ ಸಾಧ್ಯತೆಯಿದೆ.





Leave a comment