SUDDIKSHANA KANNADA NEWS/ DAVANAGERE/ DATE-29-05-2025
ಬೆಂಗಳೂರು: ಬೆಂಗಳೂರಿನಲ್ಲಿ ಮಳೆ ನೀರಿನ ಸಮಸ್ಯೆಗೆ ಶಾಶ್ವತವಾಗಿ ಪರಿಹಾರ ಒದಗಿಸಲು ನಾವು ಬದ್ಧರಾಗಿದ್ದು, ಈ ನಿಟ್ಟಿನಲ್ಲಿ ಮಾನ್ಯತಾ ಟೆಕ್ ಪಾರ್ಕ್ ಎದುರು ಮಳೆ ನೀರು ಸಂಗ್ರಹವಾಗುತ್ತಿರುವ ಸ್ಥಳಗಳಿಗೆ ಅಧಿಕಾರಿಗಳೊಂದಿಗೆ ತೆರಳಿ ಡಿಸಿಎಂ ಡಿ. ಕೆ. ಶಿವಕುಮಾರ್ ಪರಿಶೀಲನೆ ನಡೆಸಿ, ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ ಬೆಂಗಳೂರಿಗೆ ಹೊಸ ರೂಪವನ್ನು ನೀಡಲು ನಾನು ಈ ಉಸ್ತುವಾರಿಯ ಜವಾಬ್ದಾರಿ ತೆಗೆದುಕೊಂಡಿದ್ದೇನೆ. ಅದನ್ನು ಸಮರ್ಥವಾಗಿ ನಿಭಾಯಿಸಲು ನಾನು ಸದಾ ಸಿದ್ಧನಿದ್ದೇನೆ ಎಂದು ಹೇಳಿದರು.
ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿ, ಮಾನ್ಯತಾ ಟೆಕ್ ಪಾರ್ಕ್ ದೊಡ್ಡ ಜಂಕ್ಷನ್ ಆಗಿದ್ದು, ಇಲ್ಲಿಂದಲೇ ಸಮಸ್ಯೆ ಶುರುವಾಗುತ್ತಿದೆ. ಮಳೆ ನೀರು ಹರಿಯುವುದನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ. ಅಧಿಕಾರಿಗಳಿಗೆ ಸ್ಪಂದಿಸದೇ ಕೆಲವರು ತಡೆಯಾಜ್ಞೆ ತಂದಿದ್ದರು. ಹಾಗಾಗಿ ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕಾಗಿದೆ. ನಮಗೆ ಯಾರ ಆಸ್ತಿಯನ್ನು ಹಾಳು ಮಾಡಲು ಇಷ್ಟವಿಲ್ಲ. ಹರಿಯುವ ನೀರನ್ನು ನಿಲ್ಲಿಸಲು ಸಾಧ್ಯವಿಲ್ಲ. ಸಮಸ್ಯೆಗಳ ಗಂಭೀರತೆಯನ್ನು ಅರಿತು, ಖುದ್ದಾಗಿ ನಾನೇ ಬಂದು ಸ್ಥಳ ಪರಿಶೀಲನೆ ನಡೆಸಿದ್ದೇನೆ ಎಂದು ತಿಳಿಸಿದರು.
ಅಡಚಣೆ ಮಾಡಿದವರು ಸ್ಪಂದಿಸುವುದಾಗಿ ಒಪ್ಪಿಕೊಂಡಿದ್ದಾರೆ. ಯಾರ ಕಟ್ಟಡವನ್ನು ಒಡೆಯುವುದು ನಮ್ಮ ಉದ್ದೇಶವಲ್ಲ. ಯಾರಿಗೂ ತೊಂದರೆ ಆಗದಂತೆ ನೀರಿನ ಹರಿವನ್ನು ಸರಾಗಗೊಳಿಸಲು ಅಧಿಕಾರಿಗಳು ಕೆಲಸ ಮಾಡಲಿದ್ದಾರೆ ಎಂದು ಹೇಳಿದರು.