ಹಾವೇರಿ: ರಾಜಕಾರಣದಲ್ಲಿ ಇರಬೇಕಾದರೆ ಜನರ ಆಶೀರ್ವಾದ ಇರಬೇಕು. ಅವರ ಆಶೀರ್ವಾದದಿಂದ ಇಲ್ಲಿಯವರೆಗೂ ಸಾಗಿ ಬಂದಿದ್ದು, ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ. ನನ್ನ ಆಡಳಿತ ತೃಪ್ತಿ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು .
ಅವರು ಇಂದು ಹಾವೇರಿಯ ಕೊಳ್ಳಿ ಪಾಲಿಟೇಕ್ನಿಕ್ ಆವರಣದ ಹೆಲಿ ಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಹಾವೇರಿ ವೈದ್ಯಕೀಯ ಕಾಲೇಜು ಪೂರ್ಣಗೊಂಡಿದ್ದು, ಇದಕ್ಕೆ ಸುಮಾರು 500 ಕೋಟಿಗಳು ವೆಚ್ಚವಾಗಿದೆ. ಇದನ್ನು ನಾನೇ ಘೋಷಣೆ ಮಾಡಿದ್ದೆ ಹಾಗೂ ಉದ್ಘಾಟನೆಯನ್ನು ನಾನೇ ಮಾಡುತ್ತಿದ್ದೇನೆ. ಈಗಾಗಲೇ ಮೂರನೇ ಬ್ಯಾಚ್ ನಡೆಯುತ್ತಿದೆ ಎಂದರು.
ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು:
ಸಿದ್ದರಾಮಯ್ಯ ಅವರ ಸರ್ಕಾರ ಬೊಕ್ಕಸ ಖಾಲಿ ಮಾಡಿದೆ ಎಂದು ಬಿಜೆಪಿಯವರು ಮಾಡಿರುವ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ಎಂದರು.
ಜಿಎಸ್ಟಿ: ರಾಜ್ಯಕ್ಕೆ ಈ ವರ್ಷ 5 ರಿಂದ 6 ಸಾವಿರ ಕೋಟಿ ನಷ್ಟ
ಕೇಂದ್ರ ಸರ್ಕಾರವೇ ಜಿಎಸ್.ಟಿ ಜಾರಿಗೆ ತಂದು ಎಂಟು ವರ್ಷ 24% ತೆರಿಗೆ ಸುಲಿಗೆ ಮಾಡಿ ನಂತರ ನಾವು ತೆರಿಗೆ ಕಡಿಮೆ ಮಾಡಿದ್ದೇವೆ ಎಂದರು. ಕರ್ನಾಟಕ ರಾಜ್ಯವೊಂದಕ್ಕೆ ಒಂದು ವರ್ಷಕ್ಕೆ 10 ರಿಂದ 12 ಸಾವಿರ ಕೋಟಿ ರೂ.ಕಡಿಮೆಯಾಗಿದೆ.
ಈ ವರ್ಷ 5 ರಿಂದ 6 ಸಾವಿರ ಕೋಟಿ ನಷ್ಟವಾಗುತ್ತದೆ. ಇದಕ್ಕೆಲ್ಲ ಯಾರು ಹೊಣೆ ಎಂದರು. ನಾಲ್ಕೂವರೆ ಲಕ್ಷ ಕೋಟಿ ತೆರಿಗೆಯನ್ನು ನಾವು ಕೊಡುತ್ತೇವೆ. ನಮಗೆ ಕೊಡುವುದು 60ರಿಂದ 70 ಸಾವಿರ ಕೋಟಿ ಮಾತ್ರ. ಒಂದು ರೂ ಕೊಟ್ಟರೆ 14 ಪೈಸೆ ವಾಪಸ್ಸು ಬರುತ್ತದೆ. ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಕೊಡಲಿಲ್ಲ. 5495 ಕೋಟಿ ರಾಜ್ಯಕ್ಕೆ ಒದಗಿಸಲು 15 ನೇ ಹಣಕಾಸು ಆಯೋಗ ಶಿಫಾರಸು ಮಾಡಿತ್ತು. ಅದನ್ನೂ ಕೊಡಲಿಲ್ಲ. ಪೆರಿಫೆರಲ್ ರಿಂಗ್ ರೋಡಿಗೆ 3000 ಕೋಟಿ, ಬೆಂಗಳೂರಿನ ಕೆರೆಯ ಅಭಿವೃದ್ಧಿಗೆ 3000 ಕೋಟಿ ಕೊಡಲಿಲ್ಲ. ಏನೂ ಕೊಡಲಿಲ್ಲ. ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ ವೈದ್ಯಕೀಯ ಕಾಲೇಜನ್ನು ಏಕೆ ಪೂರ್ಣಗೊಳಿಸಲಿಲ್ಲ? ಇದನ್ನು ನಾವು ಅಧಿಕಾರಕ್ಕೆ ಬಂದು ಪೂರ್ಣಗೊಳಿಸಿದ್ದೇವೆ ಎಂದರು.





Leave a comment