SUDDIKSHANA KANNADA NEWS/ DAVANAGERE/ DATE-29-05-2025
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಬಿ. ಕೆ. ಹರಿಪ್ರಸಾದ್ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಕರಾವಳಿ ಜಿಲ್ಲೆಯವರು, ಅಲ್ಲಿನ ರಾಜಕೀಯ ಮತ್ತು ಸಾಮಾಜಿಕ ಸೂಕ್ಷ್ಮತೆಗಳನ್ನು ಅರಿತವರು. ಕಳೆದ ಕೆಲವು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಕೋಮು ವೈಷಮ್ಯ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಇಂದು ಅವರ ಜೊತೆ ಉಪಹಾರ ಸೇವಿಸಿ ಸಿಎಂ ಸಿದ್ದರಾಮಯ್ಯರು ಚರ್ಚೆ ನಡೆಸಿದರು.
ಕೆಲವು ಸಾಮಾನ್ಯ ವಿಷಯಗಳ ಜೊತೆಗೆ ಕರಾವಳಿ ಜಿಲ್ಲೆಗಳಲ್ಲಿ ದ್ವೇಷ ತೊಡೆದುಹಾಕಿ ಸೌಹಾರ್ದತೆ ನೆಲೆಗೊಳಿಸುವ ಕುರಿತು ಚರ್ಚಿಸಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೋಮು ಗಲಭೆಗಳನ್ನು ಉಂಟುಮಾಡುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕೂಡ ಕಾನೂನಿನ ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾರೂ ಕಾನೂನಿಗಿಂತ ದೊಡ್ಡವರಲ್ಲ ಎಂದು ಹೇಳಿದ್ದಾರೆ. ಜೊತೆಗೆ ಸಿಎಂ ಖುರ್ಚಿ ಬದಲಾವಣೆ ವಿಚಾರ ಸಂಬಂಧವೂ ಚರ್ಚೆ ನಡೆಸಿದ್ದು, ಡಿ. ಕೆ. ಶಿವಕುಮಾರ್ ಪರ ಒಲವಿದೆಯೋ ಇಲ್ಲವೋ ಎಂಬ ಕುರಿತಂತೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಸಚಿವ ಸಂಪುಟ ವಿಸ್ತರಣೆ ಬಂದಾಗ ನಿಮ್ಮನ್ನು ಸಚಿವರನ್ನಾಗಿಸಲಾಗುವುದು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿಸುವ ಕುರಿತಂತೆಯೂ ಸಿದ್ದರಾಮಯ್ಯ ಸಮಾಲೋಚನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.