SUDDIKSHANA KANNADA NEWS/ DAVANAGERE/ DATE: 06-09-2023
ದಾವಣಗೆರೆ (Davanagere): ಭದ್ರಾ ಜಲಾಶಯದಿಂದ ಎಡದಂಡೆ ನಾಲೆಗೆ ನೀರು ಹರಿಸುವುದನ್ನು ಇಂದಿನಿಂದಲೇ ಬಂದ್ ಮಾಡಲಾಗಿದ್ದು, ಬಲದಂಡೆ ನಾಲೆ ನೀರನ್ನು ಯಥಾಸ್ಥಿತಿ ಮುಂದುವರಿಸಲು ನಿರ್ಧರಿಸಲಾಗಿದೆ. ಆದ್ರೆ. ಸೆಪ್ಟಂಬರ್ 13ಕ್ಕೆ ಮತ್ತೆ ಸಭೆ ಕರೆಯಲಾಗಿದ್ದು, ಈ ಸಭೆಯತ್ತ ಕುತೂಹಲ ನೆಟ್ಟಿದೆ.
ಈ ಸುದ್ದಿಯನ್ನೂ ಓದಿ:
Mayakonda: ಕೊಳೆತು ಹೋದ ತರಕಾರಿ, ಹುಳ ಹಿಡಿದಿರುವ ಟೊಮೊಟೊ, ನವಿಲು ಕೋಸು, ಮುಳಗಾಯಿ, ಗಂಧವೇ ಇಲ್ಲದ ಬೇಳೆ: ಹಾಸ್ಟೆಲ್ ನ ಅವ್ಯವಸ್ಥೆಯ ಕೆಲ ಸ್ಯಾಂಪಲ್ ಅಷ್ಟೇ…!
ಮಾತ್ರವಲ್ಲ, ಭಾರತ ರೈತ ಒ ಕ್ಕೂಟವು ಈ ಹಿಂದೆ ಹೇಳಿರುವಂತೆ ನೂರು ದಿನಗಳ ಕಾಲ ಬಲದಂಡೆ ನಾಲೆಯಲ್ಲಿ ನೀರು ಹರಿಸಬೇಕು. ಕುಡಿಯುವ ನೀರಿಗೆ ಹೊರತುಪಡಿಸಿ ಇನ್ನು ಹತ್ತು 10 ಟಿಎಂಸಿ ನೀರು ಉಳಿಯುತ್ತದೆ. ಈ ಕಾರಣದಿಂದ ನೀರು ಹರಿಸಿದರೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ತಿಳಿಸಿದೆ.
ಮಳೆ ವಿಳಂಬವಾದರೂ ಮುಂದಿನ ಕೆಲವೇ ದಿನಗಳಲ್ಲಿ ಮಳೆ ಬರುವ ನಿರೀಕ್ಷೆ ಹೊಂದಲಾಗಿದೆ. ನಿರೀಕ್ಷೆಯಂತೆ ಮಳೆ ಬಂದಲ್ಲಿ ರೈತರ ಎಲ್ಲಾ ಸಮಸ್ಯೆಗಳಿಗೆ ಸಹಜವಾಗಿ ಪರಿಹಾರ ದೊರೆಯಲಿದೆ. ರೈತ ಮುಖಂಡರು ನೀಡಿದ ಸಲಹೆಯಂತೆ
ಎಡದಂಡೆ ನಾಲೆಯಲ್ಲಿ ನೀರು ಹರಿಸುವುದನ್ನು ಇಂದಿನಿಂದಲೇ ನಿಲ್ಲಿಸಲು ಸೂಚನೆ ನೀಡಲಾಗಿದೆ. ಅಲ್ಲದೇ ಶಿವಮೊಗ್ಗ ನಗರ ಹಾಗೂ ಸುತ್ತಮುತ್ತಲ ಪ್ರದೇಶದ ನಿವಾಸಿಗಳಿಗೆ ಕುಡಿಯುವ ನೀರನ್ನು ಒದಗಿಸಲು ಗಮನಹರಿಸಲು ಸಹ ತೀರ್ಮಾನ
ತೆಗೆದುಕೊಳ್ಳಲಾಗಿದೆ.
ಭದ್ರಾ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ವಾಡಿಕೆ ಪ್ರಮಾಣದ ಮಳೆ ಬಾರದಿರುವ ಹಿನ್ನೆಲೆಯಲ್ಲಿ ಭದ್ರಾ ಜಲಾಶಯದಲ್ಲಿ ಗಣನೀಯ ಪ್ರಮಾಣದ ನೀರಿನ ಕೊರತೆ ಇರುವುದರಿಂದ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ
ಬೆಳೆದಿರುವ ಭತ್ತ ಮತ್ತು ತೋಟಗಾರಿಕೆ ಬೆಳೆಗಳಿಗೆ ನಿರಂತರ ನೀರು ಹರಿಸಲು ಅನುಕೂಲವಾಗುವಂತೆ ಸೆಪ್ಟಂಬರ್ 11ರೊಳಗಾಗಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಾಡಾ ಅಧ್ಯಕ್ಷ
ಮಧು ಎಸ್.ಬಂಗಾರಪ್ಪ ಭರವಸೆ ನೀಡಿದರು.
ಶಿವಮೊಗ್ಗ ಸಮೀಪದ ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮಂಡಳಿಯ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರಸಕ್ತ ಸಾಲಿನ ಭದ್ರಾ ಜಲಾಶಯದ 83ನೇ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಈಗಾಗಲೇ ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಈ ಸಂಬಂಧ ಸೂಕ್ತ ನಿರ್ಣಯ ಕೈಗೊಳ್ಳುವಂತೆ ಮಾರ್ಗದರ್ಶನ ನೀಡಿದ್ದರ ಮೇರೆಗೆ ದಿನಾಂಕ ನಿಗಧಿಪಡಿಸಿ ಸಭೆ ನಡೆಸಲಾಗಿದೆ. ಸಭೆಯಲ್ಲಿ ಜಲಾಶಯದಲ್ಲಿ ನೀರಿನ ಸಂಗ್ರಹ, ಅದರ ಸದ್ಭಳಕೆ ಹಾಗೂ ರೈತರ ಹಿತ ಕಾಯುವಲ್ಲಿ ಇರಬಹುದಾದ ಸಾಧಕ-ಬಾಧಕಗಳ ಬಗ್ಗೆ ಅಭಿಪ್ರಾಯಗಳನ್ನು ಸಂಗ್ರಹಿಸಲಾಗಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಲ್ಲಿ ಚರ್ಚಿಸಿ, ರೈತ ಮುಖಂಡರ, ಅಧಿಕಾರಿಗಳ ಹಾಗೂ ತಜ್ಞರ ಅಭಿಪ್ರಾಯ ಪಡೆದು, ಈಗಾಗಲೇ ಬೆಳೆಯಲಾಗಿರುವ ಭತ್ತ, ಬೇಸಿಗೆ ಹಂಗಾಮಿನಲ್ಲಿ ಅಡಿಕೆ, ತೆಂಗು ಮತ್ತು ತೋಟಗಾರಿಕೆ ಬೆಳೆಗಳ ಸಂರಕ್ಷಣೆ ಹಾಗೂ ಈ ಭಾಗದ ಜನರ ಕುಡಿಯುವ ನೀರಿನ ಪೂರೈಕೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಅಚ್ಚುಕಟ್ಟು ಪ್ರದೇಶದ ಬೆಳೆಗಾರರಿಗೆ ಅನುಕೂಲವಾಗುವಂತೆ ಮತ್ತೊಮ್ಮೆ ಶೀಘ್ರದಲ್ಲಿ ಸಭೆ ನೀರಾವರಿ ಸಮಿತಿ ಸಭೆ ಕರೆದು ಚರ್ಚಿಸಲಾಗುವುದು. ಕೃಷಿಕರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ರೈತರ ಹಿತ ಕಾಯುವಲ್ಲಿ ಸರ್ಕಾರ ಬದ್ಧವಾಗಿದೆ ಎಂದರು.
ಸಭೆಯಲ್ಲಿ ಭಾಗವಹಿಸಿದ್ದ ರೈತ ಮುಖಂಡರು ಹೇಳಿದ್ದೇನು…?
- ಸಭೆಯಲ್ಲಿ ಭಾಗವಹಿಸಿದ್ದ ರೈತ ಮುಖಂಡ ಕೆ.ಟಿ.ಗಂಗಾಧರ್ ಅವರು ಮಾತನಾಡಿ, ಜಲಾಶಯದಿಂದ ಈಗಾಗಲೇ ಹರಿಸಿರುವ ನೀರು ಅವೈಜ್ಞಾನಿಕವಾಗಿದೆ. ಈಗಿರುವ ನೀರಿನ ಕೊರತೆಯನ್ನು ಸರಿದೂಗಿಸುವುದು ಹೇಗೆಂಬ ಪ್ರಶ್ನೆ ರೈತರನ್ನು ಕಾಡುತ್ತಿದೆ. ಆದ್ದರಿಂದ ಸರ್ಕಾರದಿಂದ ಭತ್ತದ ಬೆಳೆಗಾರರಿಗೆ ಸೂಕ್ತ ಪರಿಹಾರ ಒದಗಿಸಿ. ತೋಟಗಾರಿಕೆ ಬೆಳೆಗಾರರಿಗೆ ಬೇಸಿಗೆಯಲ್ಲಿ ನೀರನ್ನು ಒದಗಿಸಲು ಸೂಕ್ತ ನಿರ್ಣಯ ಕೈಗೊಳ್ಳಬೇಕು. ಅಡಿಕೆ ಬೆಳೆಗಾರರಿಗೆ ಪ್ಯಾಕೇಜ್ ಘೋಷಿಸುವಂತೆ ಅವರು ಒತ್ತಾಯಿಸಿದರು.
- ರೈತ ಮುಖಂಡ ಬಸವರಾಜಪ್ಪ ಅವರು ಮಾತನಾಡಿ, ಜಲಾಶಯದಿಂದ ಬಿಡುಗಡೆಯಾಗುವ ಶೇ.30ರಷ್ಟು ನೀರು ಸದ್ಬಳಕೆಯಾಗುತ್ತಿಲ್ಲ. ಅದರ ವ್ಯವಸ್ಥಿತ ನಿರ್ವಹಣೆಗಾಗಿ ಸಿಬ್ಬಂಧಿಗಳನ್ನು ನಿಯೋಜಿಸಿ ಹಾಗೂ ಚಾನಲ್ಗಳ ದುರಸ್ತಿಗೆ ಅನುದಾನ ನೀಡುವಂತೆ ಒತ್ತಾಯಿಸಿದ ಅವರು, ನೀರನ್ನು ಬೆಳೆಗೆ ಅಗತ್ಯವಿರುವಂತೆ ತಡೆಹಿಡಿಯುವ ಹಾಗೂ ಹರಿಸುವ ಬಗ್ಗೆ ನಿರ್ಣಯ ಕೈಗೊಂಡಲ್ಲಿ ರೈತರಿಗೆ ಅನುಕೂಲವಾಗಲಿದೆ ಎಂದರು.
ಸಭೆಯಲ್ಲಿ ಶಾಸಕರಾದ ಶಾರದಾ ಪೂರ್ಯಾನಾಯ್ಕ್, ಎಸ್.ಎನ್.ಚನ್ನಬಸಪ್ಪ, ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಕೆ. ಮಿಥುನ್ಕುಮಾರ್, ದಾವಣಗೆರೆ ಜಿಲ್ಲಾಧಿಕಾರಿ ಡಾ. ಎಂ.ವಿ.ವೆಂಕಟೇಶ್,
ಮೀನಾ ನಾಗರಾಜ್, ರೈತ ಮುಖಂಡರಾದ ಕೆ.ಟಿ.ಗಂಗಾಧರ್, ಬಸವರಾಜಪ್ಪ ಸೇರಿದಂತೆ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿನ ನೀರಾವರಿ ಸಲಹಾ ಸಮಿತಿ ಸದಸ್ಯರು, ಅಧಿಕಾರಿಗಳು ಭಾಗವಹಿಸಿದ್ದರು.
ರೈತ ಒಕ್ಕೂಟ ಸ್ವಾಗತ:
ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಹರಿಸುವುದನ್ನು ಮುಂದುವರಿಸಲು ನಿರ್ಧರಿಸಿರುವುದಕ್ಕೆ ಭಾರತ ರೈತ ಒಕ್ಕೂಟವು ಸ್ವಾಗತಿಸಿದೆ. ಈ ನಿರ್ಧಾರ ತೆಗೆದುಕೊಳ್ಳಲು ಸಹಕರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್, ಶಾಸಕರು,
ಹೋರಾಟಕ್ಕೆ ಸಹಕರಿಸಿದ ರೈತ ಸಂಘದ ಮುಖಂಡರು ಹಾಗೂ ರೈತರಿಗೆ ಧನ್ಯವಾದ ಅರ್ಪಿಸುವುದಾಗಿ ಒಕ್ಕೂಟದ ಪ್ರಮುಖರಾದ ಲಿಂಗರಾಜ್ ಅವರು ತಿಳಿಸಿದ್ದಾರೆ.