ಬಾಗಲಕೋಟೆ: ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಪಾಠ ನಡೆಯುತ್ತಿದ್ದ ವೇಳೆಯಲ್ಲೇ ತರಗತಿ ಕೊಠಡಿಯ ಕಾಂಕ್ರೀಟ್ ಛಾವಣಿ (ಮೇಲ್ಚಾವಣಿ) ಏಕಾಏಕಿ ಕುಸಿದು ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿರುವ ಆಘಾತಕಾರಿ ಘಟನೆ ನಡೆದಿದೆ.
ತರಗತಿಯಲ್ಲಿ ಶಿಕ್ಷಕರು ಪಾಠ ಮಾಡುತ್ತಿದ್ದ ಸಂದರ್ಭದಲ್ಲಿ ಸಿಮೆಂಟ್ ಕಾಂಕ್ರೀಟ್ನ ಪೆಯಿಂಟ್ ಹಾಗೂ ಚಾವಣಿಯ ಭಾಗವು ನೇರವಾಗಿ ವಿದ್ಯಾರ್ಥಿಗಳು ಕುಳಿತಿದ್ದ ಬೆಂಚ್ಗಳ ಮೇಲೆ ಬಿದ್ದಿದೆ. ಅದೃಷ್ಟವಶಾತ್ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳಿಗೆ ತಕ್ಷಣವೇ ಸ್ಥಳೀಯ ವೈದ್ಯರಿಂದ ಚಿಕಿತ್ಸೆ ಕೊಡಿಸಲಾಗಿದೆ.
ಕಟ್ಟಡದ ದುಸ್ಥಿತಿಗೆ ಪೋಷಕರ ಆಕ್ರೋಶ:
ಶಾಲಾ ಕಟ್ಟಡವು ತೀವ್ರವಾಗಿ ಜರ್ಜರಿತಗೊಂಡಿದ್ದು, ಛಾವಣಿಯ ಕಬ್ಬಿಣದ ಕಡ್ಡಿಗಳು ಹೊರಗೆ ಕಾಣಿಸುವ ಹಂತಕ್ಕೆ ತಲುಪಿತ್ತು ಎಂದು ತಿಳಿದುಬಂದಿದೆ. ಶಾಲೆಯ ಕಟ್ಟಡ ಅಪಾಯಕಾರಿ ಸ್ಥಿತಿಯಲ್ಲಿದ್ದರೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸೂಕ್ತ ದುರಸ್ತಿ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ವಿದ್ಯಾರ್ಥಿಗಳ ಪೋಷಕರು ಮತ್ತು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡಿ ತಕ್ಷಣವೇ ಶಾಲಾ ಕಟ್ಟಡವನ್ನು ದುರಸ್ತಿಗೊಳಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.





Leave a comment