ಠಾಣೆ: ಮುಂಬರುವ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ದೊಡ್ಡ ಮಟ್ಟದ ಕೋಮು ಗಲಭೆಗಳು ಸೃಷ್ಟಿಯಾಗಬಹುದು ಎಂಬ ಗಂಭೀರ ಆತಂಕವನ್ನು ಮಹಾರಾಷ್ಟ್ರ ನವನಿರ್ಮಾಣ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ವ್ಯಕ್ತಪಡಿಸಿದ್ದಾರೆ. ಠಾಣೆಯಲ್ಲಿ ನಡೆದ ಪಕ್ಷದ ಪದಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಮಾಜದಲ್ಲಿ ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಉದ್ದೇಶಪೂರ್ವಕವಾಗಿ ಉದ್ವಿಗ್ನತೆ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಸಾಮಾಜಿಕ ಜಾಲತಾಣಗಳನ್ನು ಬಳಸಿ ಜನರ ಗಮನವನ್ನು ನಿರುದ್ಯೋಗ, ಆರ್ಥಿಕ ಹಿಂಜರಿತ ಹಾಗೂ ಇತರೆ ಮೂಲಭೂತ ಸಮಸ್ಯೆಗಳಿಂದ ಬೇರೆಡೆ ಸೆಳೆಯಲು ಕೋಮು ಗಲಭೆಗಳನ್ನು ಸೃಷ್ಟಿಸುವ ಹುನ್ನಾರ ನಡೆಯುತ್ತಿದೆ ಎಂದು ಅವರು ಎಚ್ಚರಿಸಿದ್ದಾರೆ. ಹಿಂದುಗಳು ಹಾಗೂ ಮುಸ್ಲಿಮರು ಎಚ್ಚರಿಕೆಯಿಂದಿರಬೇಕು ಎಂದು ಕರೆ ನೀಡಿದ ರಾಜ್ ಠಾಕ್ರೆ, ಹಬ್ಬಗಳ ಹೆಸರಿನಲ್ಲಿ ಡಿಜೆ ಸೌಂಡ್ ಸಿಸ್ಟಮ್ಗಳ ಬಳಕೆ ಮತ್ತು ಲೈಟ್ಗಳ ಹೆಸರಿನಲ್ಲಿ ಆರೋಗ್ಯದ ಮೇಲಾಗುವ ಅಪಾಯಗಳ ಬಗ್ಗೆಯೂ ಮಾತನಾಡಿದರು.
ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳು ಹಾಗೂ ಜಿಡಿಪಿ ಬೆಳವಣಿಗೆಯ ಅಂಕಿ-ಅಂಶಗಳನ್ನು ಪ್ರಶ್ನಿಸಿದ ಅವರು, ದೇಶದಲ್ಲಿ ಬಡತನ ಮತ್ತು ಕಂಪನಿಗಳು ಮುಚ್ಚಲ್ಪಡುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಜೊತೆಗೆ, ಸರ್ಕಾರದ ಕಚೇರಿಗಳಲ್ಲಿ ಪ್ರಧಾನಿ ಮೋದಿ ಅವರ ಭಾವಚಿತ್ರವನ್ನು ಛತ್ರಪತಿ ಶಿವಾಜಿ ಮಹಾರಾಜ್, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಮಹಾತ್ಮ ಜ್ಯೋತಿರಾವ್ ಫುಲೆ ಅವರ ಸಾಲಿನಲ್ಲಿ ಇಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು.





Leave a comment