SUDDIKSHANA KANNADA NEWS/ DAVANAGERE/ DATE:31_07_2025
ಬೆಂಗಳೂರು: ಗ್ಯಾರಂಟಿ ಯೋಜನೆಗಳನ್ನು ನಿರ್ವಹಿಸಲು ಸಾಧ್ಯವಾಗದೇ ಹೆಣಗಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ, ಸೇವೆ, ಬದ್ಧತೆಗೆ ಹೆಸರಾದ KSRTC ಬಡವಾಗಿಸಿದೆ, ಸಂಸ್ಥೆಯ ನೌಕರರ ಹಿತಾಸಕ್ತಿಯನ್ನು ಸಂಪೂರ್ಣ ಕಡೆಗಣಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾರಿಗೆ ನಿಗಮಗಳ ನೌಕರರು ಸಂಕಷ್ಟಗಳ ನಡುವೆ ತಮ್ಮ ಸೇವಾ ನಿಷ್ಠೆಯನ್ನು ಸಂಯಮದಿಂದ ಮುಂದುವರೆಸಿಕೊಂಡು ಬಂದಿದ್ದರೂ ಅವರ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸಬೇಕಾದ ಸರ್ಕಾರ ವೇತನ ಪರಿಷ್ಕರಣೆ ಮಾಡದೇ, ಬರೋಬ್ಬರಿ 38 ತಿಂಗಳ ಬಾಕಿ ವೇತನವನ್ನೂ ಬಿಡುಗಡೆ ಮಾಡಿಲ್ಲವೆಂದರೆ ಸಂಬಳವನ್ನೇ ನಂಬಿ ಕುಟುಂಬ ನಿರ್ವಹಣೆ ಮಾಡುತ್ತಿರುವ ಸಿಬ್ಬಂದಿಗಳ ಸ್ಥಿತಿ ಹೇಳತೀರದಾಗಿದೆ ಎಂದು ತಿಳಿಸಿದ್ದಾರೆ.
READ ALSO THIS STORY: ಜಸ್ಟ್ ಒಂದೂವರೆ ವರ್ಷದಲ್ಲಿ 23 ಸಾವಿರಕ್ಕೂ ಹೆಚ್ಚು ಮಹಿಳೆಯರು, 19,000ಕ್ಕೂ ಹೆಚ್ಚು ಯುವತಿಯರು ಕಾಣೆ!
ನೌಕರರ ಪರಿಶ್ರಮಕ್ಕೆ ತಕ್ಕ ಪ್ರತಿಫಲ ನೀಡದೇ ನೌಕರರ ಹಿತಾಸಕ್ತಿಯನ್ನು ತಾತ್ಸಾರದಿಂದ ನೋಡುತ್ತಿರುವ ರಾಜ್ಯ ಸರ್ಕಾರ ಈ ಕೂಡಲೇ ಸಾರಿಗೆ ನೌಕರರ ಬೇಡಿಕೆಯನ್ನು ಈಡೇರಿಸಬೇಕೆಂದು ಒತ್ತಾಯಿಸುವೆ ಎಂದು ಹೇಳಿದ್ದಾರೆ.
ಸರ್ಕಾರ ಈ ನಿಟ್ಟಿನಲ್ಲಿ ತುರ್ತು ಕ್ರಮ ತೆಗೆದುಕೊಳ್ಳದೇ ಹೋದರೆ ಆಗಸ್ಟ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರದಿಂದ ಉಂಟಾಗುವ ಅನಾನುಕೂಲ ಪರಿಸ್ಥಿತಿ ಹಾಗೂ ಜನರಿಗೆ ಉಂಟಾಗುವ ತೊಂದರೆಗಳಿಗೆ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ. ಸಾರಿಗೆ ನೌಕರರ ನ್ಯಾಯಯುತ ಬೇಡಿಕೆಯ ಹೋರಾಟಕ್ಕೆ ಬಿಜೆಪಿ ನೈತಿಕ ಬೆಂಬಲ ವ್ಯಕ್ತಪಡಿಸುತ್ತದೆ ಎಂದು ತಿಳಿಸಿದ್ದಾರೆ.