Home ದಾವಣಗೆರೆ ಉದ್ಯೋಗ ಖಾತರಿ ಯೋಜನೆ ಮತ್ತೆ ಜಾರಿಗೆ ಒತ್ತಾಯಿಸಿ ನಿರ್ಣಯ ಅಂಗೀಕಾರಕ್ಕೆ ವಿಧಾನ ಮಂಡಲ ಅಧಿವೇಶನ: ಸಿಎಂ ಸಿದ್ದರಾಮಯ್ಯ
ದಾವಣಗೆರೆನವದೆಹಲಿಬೆಂಗಳೂರು

ಉದ್ಯೋಗ ಖಾತರಿ ಯೋಜನೆ ಮತ್ತೆ ಜಾರಿಗೆ ಒತ್ತಾಯಿಸಿ ನಿರ್ಣಯ ಅಂಗೀಕಾರಕ್ಕೆ ವಿಧಾನ ಮಂಡಲ ಅಧಿವೇಶನ: ಸಿಎಂ ಸಿದ್ದರಾಮಯ್ಯ

Share
Share

ಬೆಂಗಳೂರು: ಮಹಾತ್ಮ‌ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತೆ ಜಾರಿಗೆ ತರುವಂತೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಲು ಶೀಘ್ರವೇ ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮನಮೋಹನ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಗೆ ತಂದು, ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಬಲ ನೀಡಿದರು.

ಮನರೇಗಾ ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿಸುವ ಯೋಜನೆ. ದಲಿತರು, ಮಹಿಳೆಯರು, ರೈತರಿಗೆ ಉದ್ಯೋಗ ಒದಗಿಸುವುದು ಯೋಜನೆಯ ಉದ್ದೇಶ. ಇದರಿಂದ ವರ್ಷದಲ್ಲಿ ನೂರು ದಿನ ಕಡ್ಡಾಯವಾಗಿ ಉದ್ಯೋಗ ಸಿಗುತ್ತಿತ್ತು. ಈಗ ಈ ಉದ್ಯೋಗದ ಹಕ್ಕನ್ನೇ ಕಸಿಯುವ ಕೆಲಸಕ್ಕೆ ಕೇಂದ್ರ ಸರ್ಕಾರ ಕೈ ಹಾಕಿದೆ.

ಮಹಾತ್ಮ ಗಾಂಧಿಯವರ ಹೆಸರು ತೆಗೆದು ಗೊಂದಲ ಸೃಷ್ಟಿ ಮಾಡುವ ಹುನ್ನಾರ ಇದಾಗಿದೆ. ಈ ಮೂಲಕ ಮತ್ತೆ ಗಾಂಧಿಯವರನ್ನು ಕೊಲೆ ಮಾಡಲಾಗಿದೆ. ಯುಪಿಎ ಜಾರಿಗೆ ತಂದ ಕಾರ್ಯಕ್ರಮವನ್ನು ರದ್ದು ಮಾಡಿ ಉದ್ಯೋಗದ ಹಕ್ಕು ಕಸಿದುಕೊಂಡಿರುವುದು ಸಂವಿಧಾನ ಬಾಹಿರ ಕೆಲಸ.

28 ಕೋಟಿ ಬಡಜನರಿಗೆ ಇದರಿಂದ ಅನ್ಯಾಯವಾಗಿದೆ. ನಾವು ಈ ಅನ್ಯಾಯದ ವಿರುದ್ಧ ತೀವ್ರವಾದ ಹೋರಾಟ ಮಾಡುತ್ತೇವೆ. ಬಡವರ ಉದ್ಯೋಗದ ಹಕ್ಕು ಕಸಿದುಕೊಂಡವರಿಗೆ ಪಾಠ ಕಲಿಸಬೇಕು. ಬಡವರು ಆರ್ಥಿಕವಾಗಿ ಸಬಲರಾಗುವುದನ್ನು ಸಂಘ ಪರಿವಾರ ಸಹಿಸುವುದಿಲ್ಲ.

ಮನರೇಗಾ ಕಾಯಿದೆ ಮತ್ತೆ ಜಾರಿ ಅಗುವ ರೀತಿ ಜನಾಂದೋಲನ ನಡೆಸಲಾಗುವುದು. ಪ್ರತಿ ಗ್ರಾಮ ಪಂಚಾಯಿತಿ ಸದಸ್ಯರು ಮನರೇಗಾದಲ್ಲಿ ಕೆಲಸ ಮಾಡುತ್ತಿರುವವರನ್ನ ತಲುಪಬೇಕಾಗಿದೆ. ಈ ವಿಷಯದ ಬಗ್ಗೆ ಜನರನ್ನೂ ಜಾಗೃತಗೊಳಿಸುವ ಕೆಲಸವನ್ನು ಶಾಸಕರು ಮಾಡಬೇಕು. ನಮ್ಮ ಹೋರಾಟ ಜನಾಂದೋಲನವಾಗಿ ರೂಪುಗೊಳ್ಳುವಂತಹ ವಾತಾವರಣ ನಿರ್ಮಾಣ ಮಾಡಿ, ಮನರೇಗಾ ಉಳಿಸಬೇಕಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Share

Leave a comment

Leave a Reply

Your email address will not be published. Required fields are marked *