SUDDIKSHANA KANNADA NEWS/ DAVANAGERE/ DATE:25-10-2024
ದಾವಣಗೆರೆ: ಮೂಲಭೂತ ಸೌಲಭ್ಯಗಳಿಲ್ಲದೇ ತಾಲೂಕಿನ ಲೋಕಿಕೆರೆ ಗ್ರಾಮ ವಂಚಿತವಾಗಿದ್ದು, ಆದಷ್ಟು ಬೇಗ ಮೂಲಭೂತ ಸೌಲಭ್ಯ ಒದಗಿಸುವಂತೆ ಗ್ರಾಮದ ಮುಖಂಡ ಪುರಂದರ ಲೋಕಿಕೆರೆ ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಧಿಕಾರಿಗಳು ಸ್ಪಂದಿಸದಿದ್ದರೆ ಗ್ರಾಮಕ್ಕೆ ಆಗಮಿಸುವ ಶಾಸಕರು, ಸಚಿವರು, ಅಧಿಕಾರಿಗಳಿಗೆ ಘೇರಾವ್ ಹಾಕುವುದಲ್ಲದೇ, ನ್ಯಾಯಲಯದಲ್ಲಿ ಪಿಇಎಲ್ ಹಾಕುವುದಾಗಿ ಎಚ್ಚರಿಕೆ ನೀಡಿದರು.
ಜಲಜೀವನ ಮಿಷನ್ ಯೋಜನೆಯಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆಸಲಾಗಿದೆ. ಕಳಪೆ ಕಾಮಗಾರಿಯಿಂದ ಕೂಡಿದ್ದು, ಎರಡು ವರ್ಷಗಳಿಂದ ಜನರಿಗೆ ಶುದ್ದ ಕುಡಿಯುವ ನೀರಿನ ಪೂರೈಕೆ ಆಗುತ್ತಿಲ್ಲ ಎಂದು ಆರೋಪಿಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರವಿದ್ದರೂ ವೈದ್ಯರು ಹಾಗೂ ಸಿಬ್ಬಂದಿಗಳ ಕೊರತೆ ಇದೆ. ಇಷ್ಟೆಲ್ಲ ಸಮಸ್ಯೆ ಇದ್ದರೂ ಶಾಸಕರು ನಮ್ಮ ಕಡೆ ತಲೆ ಹಾಕುತ್ತಿಲ್ಲ. ಮುಖ್ಯಮಂತ್ರಿಗಳು ಪತ್ರಿಕಾಗೋಷ್ಠಿ ಕರೆದಾಗ ಮಾತ್ರ ಅವರು ಅಲ್ಲಿ ಕಾಣಿಸಿಕೊಳ್ಳುತ್ತಾರೆ. ನಾವಾಗಿ ಅವರನ್ನು ಮೂಲಭೂತ ಸೌಕರ್ಯ ಒದಗಿಸುವಂತೆ ಕೇಳಿಕೊಂಡರೆ ಆಯ್ತು ಮಾಡೋಣ ಅಂದು ಹೇಳುತ್ತಿದ್ದಾರೆ. ಆದರೆ ಇಲ್ಲಿವರೆಗೂ ಯಾವುದೇ ಕೆಲಸ ಮಾಡಿಸಿಲ್ಲ. ಆದ್ದರಿಂದ ನಾವು ಶಾಸಕರು ನಿಮ್ಮ ಕೈಲಿ ಕೆಲಸ ಮಾಡಲು ಆಗದಿದ್ದರೆ ರಾಜೀನಾಮೆ ನೀಡಿ ಮನೆಗೆ ಹೋಗಿ. ಇಲ್ಲವಾದರೆ ನಮ್ಮ ಲೋಕಿಕೆರೆ ಗ್ರಾಮಕ್ಕೆ ನೀವು ಬಂದರೆ ಘೇರಾವ್ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.
ಲೋಕಿಕೆರೆ ಗ್ರಾಮದಲ್ಲಿ ಆಗಿರುವ ಅವ್ಯವಹಾರ ಕುರಿತಂತೆ ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಸಿಇಒ ಸುರೇಶ್ ಇಟ್ನಾಳ್ ಅವರಿಗೆ ಪುರಂದರ ಲೋಕಿಕೆರೆ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಆ ಬಳಿಕ ಲೋಕಿಕೆರೆ ಗ್ರಾಮಕ್ಕೆ ಆಗಮಿಸಿ ಸಿಇಒ ಅವರಿಗೆ ಗ್ರಾಮಸ್ಥರು ಪರಿಸ್ಥಿತಿ ಮನದಟ್ಟು ಮಾಡಿಕೊಟ್ಟರು. ಈ ವೇಳೆ ಮಾತನಾಡಿದ ಸಿಇಒ, ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಮೂಲಭೂತ ಸೌಲಭ್ಯ ಒದಗಿಸಲು ಕ್ರಮ ಜರುಗಿಸುವುದಾಗಿ ಭರವಸೆ ನೀಡಿದರು.
ಗೋಷ್ಠಿಯಲ್ಲಿ ಗ್ರಾಮಸ್ಥರಾದ ಎಸ್.ಎಸ್.ನಾಗಪ್ಪ, ಆರ್.ರಾಮಸ್ವಾಮಿ, ಪೆರಿಯಾರ್ ಮಂಜುನಾಥ್ ಮತ್ತಿತರರು ಹಾಜರಿದ್ದರು.