SUDDIKSHANA KANNADA NEWS/ DAVANAGERE/ DATE:23-03-2024
ದಾವಣಗೆರೆ: ಜಿಲ್ಲೆಯ ವಿವಿಧ ಕಡೆ ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ವಿರುದ್ಧ ಕಾರ್ಯಾಚರಣೆ ನಡೆಸಲಾಗಿದೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳ ವಿರುದ್ದ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ನಿರ್ದೇಶನದಲ್ಲಿ ಪೊಲೀಸ್ ನಿರೀಕ್ಷಕರು, ಉಪ ನಿರೀಕ್ಷಕರುಗಳ ನೇತತೃತ್ವದಲ್ಲಿ ಪೊಲೀಸ್ ಠಾಣಾ ಮಟ್ಟದಲ್ಲಿ ವಿಶೇಷ ತಂಡಗಳ ರಚಿಸಲಾಗಿದೆ.
ತಂಡಗಳು ಬಿಳಿಚೋಡು, ಜಗಳೂರು, ಹರಿಹರ ನಗರ, ಆಜಾದ್ ನಗರ, ಆರ್.ಎಂ.ಸಿ ಯಾರ್ಡ್, ಬಸವಾಪಟ್ಟಣ, ದಾವಣಗೆರೆ ಗ್ರಾಮಾಂತರ, ಮಾಯಕೊಂಡ, ಹದಡಿ, ಚನ್ನಗಿರಿ, ಹೊನ್ನಾಳಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವ ಸ್ಥಳಗಳ ಮೇಲೆ ದಾಳಿ ಮಾಡಿದ್ದು, ಈ ಸಂಬಂಧ ಮೇಲ್ಕಂಡ ಠಾಣೆಗಳಲ್ಲಿ 12 ಪ್ರಕರಣಗಳು ದಾಖಲಾಗಿದೆ.
12 ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 40,687 ರೂ. ಮೌಲ್ಯದ 97 ಲೀ ಮದ್ಯ ವಶಪಡಿಸಿಕೊಳ್ಳಲಾಗಿದೆ. ದಾಳಿಯಲ್ಲಿಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿತರನ್ನು ವಶಕ್ಕೆ ಪಡೆದಿದ್ದು, ಆರೋಪಿತರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಯನ್ನು ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಶ್ಲಾಘಿಸಿದ್ದಾರೆ.