SUDDIKSHANA KANNADA NEWS/ DAVANAGERE/ DATE:24-02-2025
ಬೆಂಗಳೂರು: ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ನಮ್ಮ ಸರ್ಕಾರಕ್ಕೆ ಪೂರ್ಣ ಬದ್ಧತೆ ಇದ್ದು, ಪೂಜ್ಯರ ಬೇಡಿಕೆಗಳಲ್ಲಿ ಸಾಧ್ಯ ಇರುವವಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.
ಕಾವೇರಿ ನಿವಾಸದಲ್ಲಿ ತಮ್ಮನ್ನು ಭೇಟಿಯಾದ ಲಿಂಗಾಯತ ಸ್ವಾಮೀಜಿಗಳು, ಸಚಿವರು, ಶಾಸಕರು, ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿದರು.
ಮೊದಲ ಬಾರಿ ಮುಖ್ಯಮಂತ್ರಿ ಆದಾಗ ಬಸವ ಜಯಂತಿಯಂದೇ ಪ್ರಮಾಣವಚನ ಸ್ವೀಕರಿಸಿದೆ. ಬಸವಣ್ಣನವರ ಭಾವಚಿತ್ರ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯಗೊಳಿಸಿದ್ದು ನಮ್ಮದೇ ಕಾಂಗ್ರೆಸ್ ಸರ್ಕಾರ ಎಂದರು.
ಬಸವಣ್ಣನವರ ವಿಚಾರ ಮತ್ತು ಹೋರಾಟ ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಪೂರಕ. ಜಾತಿವಾದಿ ಪಟ್ಟಭದ್ರರಿಗೆ ಬಸವಣ್ಣನವರ ವಿಚಾರಗಳು ಹಿಡಿಸಲ್ಲ. ಪಟ್ಟಭದ್ರರು ಬಹಿರಂಗವಾಗಿ ಬಸವಣ್ಣನವರನ್ನು ವಿರೋಧಿಸಲು ಸಾಧ್ಯವಿಲ್ಲ. ಅದಕ್ಕೇ ಆಂತರಿಕವಾಗಿ ವಿರೋಧಿಸುತ್ತಿದ್ದಾರೆ ಎಂದರು.
ಜಾತಿ ವ್ಯವಸ್ಥೆ ಬಹಳ ಗಟ್ಟಿಯಾಗಿ ಬೇರೂರಿದೆ. ಇದಕ್ಕೆ ಪಟ್ಟಭದ್ರರು ನೀರು ಗೊಬ್ಬರ ಹಾಕುತ್ತಿದ್ದಾರೆ. ಜಾತ್ಯತೀತ, ಸಮ ಸಮಾಜ ನಿರ್ಮಾಣ ಮಾಡಲು ಬಸವಣ್ಣನವರ ಹೋರಾಟ ಪೂರಕ. ನಮ್ಮ ಜಾತಿ ವ್ಯವಸ್ಥೆಗೆ ಚಲನೆ ಇಲ್ಲ. ಜಾತಿ ಜಡತ್ವ, ಆರ್ಥಿಕ ಜಡತ್ವ ಇರುವ ಸಮಾಜದಲ್ಲಿ ಚಲನೆ ಸಾಧ್ಯವಿಲ್ಲ. ಬಸವಣ್ಣನವರ ವಿಚಾರಗಳೇ ಅಂಬೇಡ್ಕರ್ ವಿಚಾರಗಳಾಗಿದ್ದು ಇವೆಲ್ಲವೂ ಸಂವಿಧಾನದಲ್ಲಿ ಅಡಕವಾಗಿವೆ ಎಂದು ತಿಳಿಸಿದರು.
ಗೋರುಚ ಅಧ್ಯಕ್ಷತೆಯಲ್ಲಿ ಅನುಭವ ಮಂಟಪ ಪುನರುಜ್ಜೀವನಕ್ಕೆ ಮುಂದಾಗಿದ್ದು ನಾವು. ಅನುಭವ ಮಂಟಪ ಮೊದಲ ಪ್ರಜಾಪ್ರಭುತ್ವದ ವೇದಿಕೆ. ಯಾರ ಒತ್ತಾಯವೂ ಇಲ್ಲದ ವೇಳೆಯಲ್ಲೇ ನಮ್ಮ ಸರ್ಕಾರ ಅನುಭವ ಮಂಟಪ ಪುನರುಜ್ಜೀವನಕ್ಕೆ ಮುಂದಾಗಿತ್ತು. ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ಕಾಂಗ್ರೆಸ್ ಸರ್ಕಾರ ಎಂದರು.