ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಗುರುವಾರ) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ. ಆದರೆ, ಇದೇ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಕೌಟುಂಬಿಕ ತುರ್ತು ಪರಿಸ್ಥಿತಿಯ ಹಿನ್ನೆಲೆಯಲ್ಲಿ ದಿಢೀರನೆ ತವರು ನಿವಾಸ ಇಂದೋರ್ಗೆ ತೆರಳಿರುವುದು ರಾಜಕೀಯ ವಲಯದಲ್ಲಿ ತೀವ್ರ ಸಸ್ಪೆನ್ಸ್ ಸೃಷ್ಟಿಸಿದೆ.
ಹೈಕಮಾಂಡ್ ಸೂಚನೆಗೆ ಮಣಿದ ಸಿಎಂ:
ದೆಹಲಿಯಲ್ಲಿ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ಪ್ರಮುಖ ನಾಯಕರೊಂದಿಗೆ ನಡೆದ ಸುದೀರ್ಘ ಸಭೆಯ ಬಳಿಕ, ಸಿದ್ದರಾಮಯ್ಯ ಅವರು ರಾಜೀನಾಮೆಗೆ ಒಪ್ಪಿದ್ದಾರೆ ಎನ್ನಲಾಗಿದೆ. ಹೈಕಮಾಂಡ್ ಅವರಿಗೆ ರಾಷ್ಟ್ರ ರಾಜಕಾರಣದಲ್ಲಿ ದೊಡ್ಡ ಜವಾಬ್ದಾರಿ ಹಾಗೂ ರಾಜ್ಯಸಭಾ ಸ್ಥಾನದ ಆಫರ್ ನೀಡಿದೆ. ಹಿರಿಯ ನಾಯಕ ಆರ್.ವಿ. ದೇಶಪಾಂಡೆ ಅವರ ಬಳಿ ಸ್ವತಃ ಸಿದ್ದರಾಮಯ್ಯ ಅವರೇ, “ನಾನು ಹೈಕಮಾಂಡ್ಗೆ ಮಾತು ಕೊಟ್ಟಿದ್ದು, ಅದನ್ನು ಉಳಿಸಿಕೊಳ್ಳುತ್ತೇನೆ” ಎಂದು ಹೇಳಿರುವುದಾಗಿ ತಿಳಿದುಬಂದಿದೆ.
ಡಿಕೆಶಿ ಬಣದಲ್ಲಿ ಸಂಭ್ರಮ:
ಸಿದ್ದರಾಮಯ್ಯ ಅವರ ನಿರ್ಗಮನದ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ರಾಮನಗರ ಸೇರಿದಂತೆ ರಾಜ್ಯದ ವಿವಿಧೆಡೆ ಅವರ ಬೆಂಬಲಿಗರು ಈಗಾಗಲೇ ಸಿಹಿ ಹಂಚಿ ಸಂಭ್ರಮಾಚರಣೆ ಆರಂಭಿಸಿದ್ದಾರೆ.
ಹೆಚ್ಚಿದ ಗೊಂದಲ:
ಇಂದು ಬೆಳಗ್ಗೆ ಸಚಿವರು ಮತ್ತು ಡಿ.ಕೆ. ಶಿವಕುಮಾರ್ ಅವರಿಗೆ ಸಿದ್ದರಾಮಯ್ಯ ತಮ್ಮ ನಿವಾಸದಲ್ಲಿ ಉಪಾಹಾರ ಕೂಟ ಹಮ್ಮಿಕೊಂಡಿದ್ದಾರೆ. ತದನಂತರ ಅವರು ರಾಜೀನಾಮೆ ಸಲ್ಲಿಸಲು ನಿರ್ಧರಿಸಿದ್ದರು. ಆದರೆ ರಾಜ್ಯಪಾಲರು ನಗರದಲ್ಲಿ ಇಲ್ಲದ ಕಾರಣ, ಮುಖ್ಯಮಂತ್ರಿಗಳ ಕಚೇರಿ (CMO) ಮೂಲಗಳ ಪ್ರಕಾರ ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ಪತ್ರವನ್ನು ನೇರವಾಗಿ ರಾಜ್ಯಪಾಲರ ಸಚಿವಾಲಯಕ್ಕೆ/ಕಚೇರಿಗೆ ತಲುಪಿಸಲಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ, ಅಹಿಂದ ಸಂಘಟನೆಗಳು ಸಿದ್ದರಾಮಯ್ಯ ಅವರನ್ನು ಬದಲಾಯಿಸದಂತೆ ಕಾಂಗ್ರೆಸ್ಗೆ ಎಚ್ಚರಿಕೆ ನೀಡಿವೆ.





Leave a comment