ಬೆಳಗಾವಿ: ರಾಜ್ಯದಲ್ಲಿ 545 ಪಿ.ಎಸ್.ಐ. ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿ, ಈಗಾಗಲೆ ಅಭ್ಯರ್ಥಿಗಳ ತರಬೇತಿ ನಡೆಯುತ್ತಿದ್ದು, ಮೂರು ತಿಂಗಳ ಒಳಗಾಗಿ ಖಾಲಿ ಇರುವ ಸ್ಥಳಗಳಲ್ಲಿ ಪಿಎಸ್ಐ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಗಳವಾರ ವಿಧಾನಸಭೆಯಲ್ಲಿನ ಪ್ರಶ್ನೋತ್ತರ ಕಲಾಪದಲ್ಲಿ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿ ಅವರು ಮಾತನಾಡಿದರು.
ಮೂಡಬಿದ್ರೆ, ಮುಲ್ಕಿ ಕ್ಷೇತ್ರ ವ್ಯಾಪ್ತಿಯಲ್ಲಿನ ಪೊಲೀಸ್ ಠಾಣೆಗಳಿಗೆ ಮೂಲಭೂತ ಸೌಲಭ್ಯಗಳ ಕೊರತೆ ಒದಗಿಸಿಕೊಡುವ ಹಾಗೂ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಶಾಸಕ ಉಮಾನಾಥ್ ಅವರು ಪ್ರಶ್ನೆ ಸಲ್ಲಿಸಿದ್ದರು. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಉತ್ತರ ನೀಡಿ, ಕಳೆದ ಐದು ವರ್ಷಗಳಿಂದಲೂ ಪಿಎಸ್ಐಗಳ ನೇಮಕಾತಿ ಆಗಿಲ್ಲ. ಈ ಹಿಂದೆ 545 ಪಿ.ಎಸ್.ಐ. ಹುದ್ದೆಗಳ ನೇಮಕಾತಿಗಾಗಿ ನಡೆದಂತಹ ಪ್ರಕರಣವನ್ನು ಬಗೆಹರಿಸಿ, ನೇಮಕಾತಿ ಮಾಡಿದ್ದು, ಆಯ್ಕೆಯಾದ ಅಭ್ಯರ್ಥಿಗಳನ್ನು ತರಬೇತಿಗಾಗಿ ನಿಯೋಜಿಸಲಾಗಿದೆ. ಮೂರು ತಿಂಗಳಲ್ಲಿ ತರಬೇತಿ ಪೂರ್ಣಗೊಳ್ಳಲಿದ್ದು, ಬಳಿಕ ಖಾಲಿ ಇರುವೆಡೆ, ಅಗತ್ಯ ಇರುವ ಕಡೆಗಳಲ್ಲಿ ಪಿಎಸ್ಐಗಳ ಹುದ್ದೆಯನ್ನು ಭರ್ತಿ ಮಾಡಲಾಗುವುದು. ಪೊಲೀಸ್ ಕಾನ್ಸ್ಟೇಬಲ್ಗಳ ನೇಮಕಾತಿಗಾಗಿಯೂ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅನುಮೋದನೆಯಾಗಿ
ಬಂದ ಬಳಿಕ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದರು.





Leave a comment