ನವದೆಹಲಿ: ಅತ್ಯಾಚಾರ ಪ್ರಕರಣವೊಂದನ್ನು ಮುಚ್ಚಿಹಾಕಲು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಪತ್ನಿ ಡಾ. ಗುರ್ಪ್ರೀತ್ ಕೌರ್ ಅವರು 5 ಕೋಟಿ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಪಂಜಾಬ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, ಎರಡು ವಾರಗಳಲ್ಲಿ ವರದಿ ನೀಡುವಂತೆ ಸೂಚಿಸಿದೆ.
ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ರಂಜಿತ್ ಸಿಂಗ್ ಅವರು ನೀಡಿರುವ ದೂರಿನ ಆಧಾರದ ಮೇಲೆ ಎನ್ಎಚ್ಆರ್ಸಿ ಸದಸ್ಯ ಪ್ರಿಯಾಂಕ್ ಕಾನೂಂಗೊ ನೇತೃತ್ವದ ಪೀಠ ಈ ಕ್ರಮ ಕೈಗೊಂಡಿದೆ. ಪ್ರಕರಣದ ಕುರಿತು ತನಿಖೆ ನಡೆಸಿ ‘ಕ್ರಮ ಕೈಗೊಂಡ ವರದಿ’ (ATR) ಸಲ್ಲಿಸುವಂತೆ ಪಂಜಾಬ್ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ (DGP) ಆಯೋಗ ನಿರ್ದೇಶನ ನೀಡಿದೆ. ಜೊತೆಗೆ ಈ ವಿಷಯವನ್ನು ಕೇಂದ್ರ ಗೃಹ ಸಚಿವಾಲಯದ ಮಹಿಳಾ ಸುರಕ್ಷತಾ ವಿಭಾಗದ ಗಮನಕ್ಕೂ ತರಲಾಗಿದೆ.
ನಿವೃತ್ತ ನ್ಯಾಯಮೂರ್ತಿಗೆ ಲೀಗಲ್ ನೋಟಿಸ್:
ತಮ್ಮ ವಿರುದ್ಧ ಕೇಳಿಬಂದಿರುವ ಈ ಆರೋಪಗಳನ್ನು ಆಮ್ ಆದ್ಮಿ ಪಾರ್ಟಿ (AAP) ಮುಖಂಡರು ಮತ್ತು ಸಿಎಂ ಪತ್ನಿ ಡಾ. ಗುರ್ಪ್ರೀತ್ ಕೌರ್ ತಳ್ಳಿಹಾಕಿದ್ದಾರೆ. ಇದೀಗ ದೂರುದಾರರಾದ ನಿವೃತ್ತ ನ್ಯಾಯಮೂರ್ತಿ ರಂಜಿತ್ ಸಿಂಗ್ ಅವರಿಗೆ ಗುರ್ಪ್ರೀತ್ ಕೌರ್ ಅವರು ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ನೋಟಿಸ್ ತಲುಪಿದ 24 ಗಂಟೆಯೊಳಗೆ ಸೂಕ್ತ ಪ್ರತಿಕ್ರಿಯೆ ನೀಡದಿದ್ದರೆ ನ್ಯಾಯಾಲಯದಲ್ಲಿ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.





Leave a comment