SUDDIKSHANA KANNADA NEWS/ DAVANAGERE/ DATE:20-01-2025
ದಾವಣಗೆರೆ: ಜಿಲ್ಲೆಯಲ್ಲಿ ಹೊಸದಾಗಿ ಟೆಂಡರ್ ಪ್ರಕ್ರಿಯೆ ಮುಗಿಯದ ಕಾರಣ ಮರಳಿಗೆ ಸಮಸ್ಯೆಯಾಗಿದ್ದು ಇದರ ನಿವಾರಣೆಗಾಗಿ ಶೀಘ್ರದಲ್ಲಿ ಟೆಂಡರ್ ಕರೆದು ಗುರುತಿಸಲಾದ 24 ಬ್ಲಾಕ್ಗಳಲ್ಲಿ ಮರಳು ಎತ್ತಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದರು.
ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಮರಳು ಬ್ಲಾಕ್ಗಳು ಹರಾಜು ಮಾಡದ ಕಾರಣ ಶಿವಮೊಗ್ಗದಿಂದ ಮರಳು ತರಿಸಿಕೊಳ್ಳಬೇಕಾಗಿದೆ ಮತ್ತು ಇಲ್ಲಿ ಕಾಳಸಂತೆಯಲ್ಲಿ ಮರಳು ಸಾಗಣೆ ಮಾಡಲಾಗುತ್ತದೆ. ಇದರಿಂದ ಬಡವರು, ಮಧ್ಯಮ ವರ್ಗದವರು ಮನೆ ಕಟ್ಟಿಕೊಳ್ಳಲು ಸಮಸ್ಯೆಯಾಗಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಸಭೆಯಲ್ಲಿ ಪ್ರಸ್ತಾಪಿಸಿದರು.
ಈ ವೇಳೆ ಗಣಿ ಮತ್ತು ಭೂ ವಿಜ್ಞಾನ ಸಚಿವರ ಖಾತೆಗೆ ಬರುವುದರಿಂದ ಶೀಘ್ರವಾಗಿ ಟೆಂಡರ್ ಕರೆಯಬೇಕೆಂದಾಗ ಸಚಿವರು ಅಲ್ಪಾವಧಿ ಟೆಂಡರ್ ಕರೆದು ಗುರುತಿಸಲಾದ ಮರಳು ಬ್ಲಾಕ್ಗಳನ್ನು ಹರಾಜು ಮಾಡುವ ಮೂಲಕ ಜಿಲ್ಲೆಯ ಜನರಿಗೆ ಮರಳು ಸಿಗುವಂತೆ ಕ್ರಮವಹಿಸಲು ಜಿಲ್ಲಾಧಿಕಾರಿಗೆ ತಿಳಿಸಿದರು.
ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಗ್ರಾಮಗಳಲ್ಲಿ ಪ್ರತಿ ಮನೆಗಳಿಗೆ ನೀರಿನ ಸಂಪರ್ಕವನ್ನು ಕಲ್ಪಿಸಿದ್ದು ಹಲವು ಗ್ರಾಮಗಳಲ್ಲಿ ಯೋಜನೆ ಜಾರಿಯಾದರೂ ನೀರು ಸಿಗುತ್ತಿಲ್ಲ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಪ್ರಸ್ತಾಪಿಸಿದರು.
ಇದಕ್ಕೆ ಸಚಿವರು ಸಮಸ್ಯೆ ಇರುವ ಜೆಜೆಎಂ ಕಾಮಗಾರಿಗಳನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ಆಯಾ ಶಾಸಕರೊಂದಿಗೆ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿ ಕ್ರಮ ಕೈಗೊಳ್ಳಲು ತಿಳಿಸಿದರು.
ಕಳಪೆ ಕಾಮಗಾರಿ ಮಾಡಿದ ಗ್ರಾಮ ಪಂಚಾಯಿತಿ ಪಿಡಿಓ ಮತ್ತು ಗ್ರಾಮೀಣ ಕುಡಿಯುವ ನೀರು ಸರಬರಾಜು ವಿಭಾಗದ ಇಂಜಿನಿಯರ್ಗಳ ಮೇಲೆ ಕ್ರಮಕ್ಕೆ ಮುಂದಾಗಿದೆ ಎಂದು ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ತಿಳಿಸಿದರು.
ಆರ್.ಓ ಪ್ಲಾಂಟ್ ಪಂಚಾಯಿತಿಗೆ; ಗ್ರಾಮೀಣ ಪ್ರದೇಶದಲ್ಲಿ ಅಳವಡಿಸಲಾದ ಶುದ್ದ ಕುಡಿಯುವ ನೀರಿನ ಘಟಕಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ, ಸಕಾಲಕ್ಕೆ ರಿಪೇರಿಯಾಗುತ್ತಿಲ್ಲ ಎಂಬ ದೂರುಗಳು ಸಾಕಷ್ಟಿದ್ದು ಸರ್ಕಾರ ಇದಕ್ಕಾಗಿ ಆಯಾ ಪಂಚಾಯಿತಿಗಳಿಗೆ ಆರ್.ಓ.ಗಳ ನಿರ್ವಹಣೆ ಜವಾಬ್ದಾರಿ ನೀಡಿದ್ದು ಇದಕ್ಕಾಗಿ ಪ್ರತಿ ತಿಂಗಳು ಮೂರು ಸಾವಿರ ರೂ.ಗಳ ನಿರ್ವಹಣಾ ವೆಚ್ಚ ನೀಡಲಾಗುತ್ತದೆ. ಕುಡಿಯುವ ನೀರಿನ ಸಮಸ್ಯೆಯಾದಲ್ಲಿ 15 ನೇ ಹಣಕಾಸು ಯೋಜನೆಯಡಿ ಪಂಚಾಯಿತಿಯಿಂದ ಕೊಳವೆಬಾವಿ, ಪೈಪ್ಲೈನ್ ಮಾಡಲು ಅವಕಾಶ ಇದೆ ಎಂದರು.
ಸಭೆಯಲ್ಲಿ ಚನ್ನಗಿರಿ ಶಾಸಕರಾದ ಬಸವರಾಜ್ ವಿ.ಶಿವಗಂಗಾ, ಮೇಯರ್ ಚಮನ್ ಸಾಬ್.ಕೆ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ; ಶಮ್ಲಾ ಇಕ್ಬಾಲ್, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ; ಸುರೇಶ್ ಬಿ.ಇಟ್ನಾಳ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.