ನವದೆಹಲಿ: ಇರಾನ್ ಮತ್ತು ಅಮೆರಿಕ ನಡುವಿನ ಯುದ್ಧದಲ್ಲಿ ಶಾಂತಿ ಸ್ಥಾಪಿಸಲು ಪಾಕಿಸ್ತಾನ ಮಧ್ಯಸ್ಥಿಕೆ ವಹಿಸುತ್ತಿದ್ದರೂ, ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ವೀಕ್ಷಕರಾಗಿ ಉಳಿದಿದ್ದಾರೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
‘ರಚನಾತ್ಮಕ ಕಾಂಗ್ರೆಸ್ ರಾಷ್ಟ್ರೀಯ ಸಮಾವೇಶ’ದಲ್ಲಿ ಮಾತನಾಡಿದ ಅವರು, ಭಾರತದ ವಿದೇಶಾಂಗ ನೀತಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದರು.
ಇರಾನ್ ಭಾರತದ ಹಳೆಯ ಮಿತ್ರ ರಾಷ್ಟ್ರವಾಗಿದ್ದು, ಅಮೆರಿಕ ಮತ್ತು ರಷ್ಯಾ ಕೂಡ ನಮ್ಮೊಂದಿಗೆ ಉತ್ತಮ ಬಾಂಧವ್ಯ ಹೊಂದಿವೆ. ಇಂತಹ ಸಮಯದಲ್ಲಿ ಭಾರತ ಮಧ್ಯಸ್ಥಿಕೆ ವಹಿಸಿ ತನ್ನ ರಾಜತಾಂತ್ರಿಕ ಶಕ್ತಿಯನ್ನು ಪ್ರದರ್ಶಿಸಬೇಕಿತ್ತು. ಆದರೆ, ಪ್ರಧಾನಿ ಮೋದಿ ಅವರ ಸಡಿಲ ನೀತಿಯಿಂದಾಗಿ ಆ ಅವಕಾಶವನ್ನು ಪಾಕಿಸ್ತಾನ ಪಡೆದುಕೊಂಡಿದೆ ಎಂದು ರಾಹುಲ್ ಗಾಂಧಿ ಕಳವಳ ವ್ಯಕ್ತಪಡಿಸಿದರು.
ಇದೇ ವೇಳೆ ಚೀನಾ ಗಡಿ ವಿವಾದದ ಕುರಿತು ಮಾತನಾಡಿದ ಅವರು, ಅರುಣಾಚಲ ಪ್ರದೇಶದಲ್ಲಿ ಭಾರತೀಯ ಯೋಧರು ಗಸ್ತು ತಿರುಗುವುದನ್ನು ಚೀನಾ ಸೇನೆ ತಡೆದಿದೆ ಎಂದು ಆರೋಪಿಸಿದರು.
ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ದೇಶದ ವಿದೇಶಾಂಗ ಮತ್ತು ಭದ್ರತಾ ನೀತಿಯನ್ನು ಹಾಳುಮಾಡಿದ್ದಾರೆ. ಆರ್.ಎಸ್.ಎಸ್ (RSS) ಸಂಸ್ಥೆಯು ಸಣ್ಣ ಉದ್ಯಮಿಗಳ ಹಿತಾಸಕ್ತಿಯನ್ನು ಮರೆತು, ಬೃಹತ್ ಬಂಡವಾಳಶಾಹಿಗಳ ಕೈಗೊಂಬೆಯಾಗಿದೆ ಎಂದು ಅವರು ಕಿಡಿಕಾರಿದರು.





Leave a comment