Site icon Kannada News-suddikshana

ಮಾಹಿತಿ ಹಕ್ಕು ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ನವೆಂಬರ್ ನಲ್ಲಿ ಲೋಕ ಅದಾಲತ್ ಮಾದರಿಯಲ್ಲಿ ಕಲಾಪ: ರುದ್ರಣ್ಣ ಹರ್ತಿಕೋಟೆ

ಲೋಕ ಅದಾಲತ್

ದಾವಣಗೆರೆ: ಮಾಹಿತಿ ಹಕ್ಕು ಕಾಯಿದೆಯಿಂದ ಆಡಳಿತದಲ್ಲಿ ಪಾರದರ್ಶಕತೆ ಹೆಚ್ಚಳ, ಒಣೆಗಾರಿಕೆ, ಭ್ರಷ್ಟಾಚಾರ ತಡೆ ಸೇರಿದಂತೆ ಆಡಳಿತದಲ್ಲಿ ಸಾರ್ವಜನಿಕರ ಸಹಭಾಗಿತ್ವವನ್ನು ಹೆಚ್ಚಿಸಲು ಬಹಳ ಉಪಯೋಗವಾಗಿದೆ.
ಆರ್.ಟಿ.ಐ. ಕಾಯಿದೆಯಡಿ ಸಲ್ಲಿಕೆಯಾಗುವ ಎರಡನೇ ಮೇಲ್ಮನವಿ ಪ್ರಕರಣಗಳನ್ನು ಗಣನೀಯವಾಗಿ ತಗ್ಗಿಸಲು ಮಾಹಿತಿ ಹಕ್ಕು ಆಯೋಗ ಮುಂದಾಗಿದ್ದು ನವೆಂಬರ್ ವೇಳೆಗೆ ಜಿಲ್ಲಾ ಹಂತದಲ್ಲಿ ಕಲಾಪ ನಡೆಸುವ ಮೂಲಕ ಲೋಕ ಅದಾಲತ್ ಮಾದರಿಯಲ್ಲಿ ಪ್ರಕರಣಗಳನ್ನು ಶೀಘ್ರ ಇತ್ಯರ್ಥಕ್ಕೆ ಕ್ರಮವಹಿಸಲಾಗುತ್ತದೆ ಎಂದು ಮಾಹಿತಿ ಹಕ್ಕು ಆಯೋಗ ಆಯುಕ್ತ ರುದ್ರಣ್ಣ ಹರ್ತಿಕೋಟೆ ಮತ್ತು ರಾಜಶೇಖರ್ ಅವರು ತಿಳಿಸಿದರು.

ಅವರು ಜಿಲ್ಲಾಧಿಕಾರಿಗಳ ಕಚೇರಿ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲೆಯಲ್ಲಿನ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಮತ್ತು ಮೊದಲ ಮೇಲ್ಮನವಿ ಪ್ರಾಧಿಕಾರಗಳಿಗೆ ಏರ್ಪಡಿಸಲಾದ ತರಬೇತಿ ಕಾರ್ಯಗಾರದ ನಂತರ ಪತ್ರಿಕಾಗೋಷ್ಠಿಯಲ್ಲಿ
ಮಾತನಾಡಿದರು.

ಈ ಸುದ್ದಿಯನ್ನೂ ಓದಿ: ಸಂವಿಧಾನ ಬದಲಾವಣೆ ಮಾಡಲು ಮುಂದಾದ್ರೆ ನೀವು ಉಳಿಯಲ್ಲ: ಮೋದಿಗೆ ಮಲ್ಲಿಕಾರ್ಜುನ ಖರ್ಗೆ ವಾರ್ನಿಂಗ್!

ರುದ್ರಣ್ಣ ಹರ್ತಿಕೋಟೆ ಅವರು ಮಾತನಾಡಿ ರಾಜ್ಯ ಮಾಹಿತಿ ಹಕ್ಕು ಆಯೋಗದಲ್ಲಿ 10 ಆಯುಕ್ತರು, ಒಬ್ಬರು ಮುಖ್ಯ ಆಯುಕ್ತರು ಇರುತ್ತಾರೆ. ರಾಜ್ಯದಲ್ಲಿ ಎರಡನೇ ಮೇಲ್ಮನವಿಗೆ ಸಂಬಂಧಿಸಿದ 56 ಸಾವಿರ ಪ್ರಕರಣಗಳಿದ್ದು ಸತತ ಕಲಾಪಗಳನ್ನು ನಡೆಸುವ ಮೂಲಕ ಇವುಗಳನ್ನು 46446 ಕ್ಕೆ ಇಳಿಕೆ ಮಾಡಲಾಗಿದೆ. ಹೆಚ್ಚು ಪ್ರಕರಣಗಳು ಬೆಂಗಳೂರು ನಗರ ಜಿಲ್ಲೆಯ 11428 ಇದ್ದರೆ ಅತೀ ಕಡಿಮೆ ಪ್ರಕರಣಗಳು ಕೊಡಗು ಜಿಲ್ಲೆಯ 75 ಎರಡನೇ ಮೇಲ್ಮನವಿ ಪ್ರಕರಣಗಳಿವೆ. ದಾವಣಗೆರೆಯಲ್ಲಿ 559 ಪ್ರಕರಣಗಳಿದ್ದು ಕಡಿಮೆ ಇರುವ ಜಿಲ್ಲೆಗಳಲ್ಲಿ ಆರನೇ ಸ್ಥಾನದಲ್ಲಿದ್ದು ಹೆಚ್ಚಿನ ಪ್ರಕರಣಗಳಿರುವುದಿಲ್ಲ ಎಂದರು.

ಮಾಹಿತಿ ಹಕ್ಕು ಕಾಯಿದೆಯಡಿ ಸಲ್ಲಿಸುವ ಅರ್ಜಿಗಳಿಗೆ ಲಭ್ಯವಿರುವ ದಾಖಲೆಗಳನ್ನು ಒದಗಿಸಬೇಕು. ಅರ್.ಟಿ.ಐ ರಡಿ ಸಲ್ಲಿಸುವ ಅರ್ಜಿಗಳನ್ನು ತಗ್ಗಿಸಲು 4(1) ಎ.ಬಿ ಘೋಷಣೆಯನ್ನು ಮಾಡಿಕೊಳ್ಳಬೇಕು. ಯೋಜನೆಗಳ ಮಾಹಿತಿಯನ್ನು ಸ್ವಯಂಪ್ರೇರಿತವಾಗಿ ಪ್ರದರ್ಶನ ಮಾಡಿಕೊಂಡಲ್ಲಿ ಅರ್ಜಿಗಳ ಸಂಖ್ಯೆ ಕಡಿಮೆಯಾಗಲಿದೆ. ಕಾಯಿದೆಯಡಿ ನಿಗದಿ ಮಾಡಿದ ಸಮಯದಲ್ಲಿಯೇ ಮಾಹಿತಿಯನ್ನು ನೀಡಬೇಕು, ಇಲ್ಲವಾದಲ್ಲಿ ಅದಕ್ಕೆ ಸಂಬಂಧಿಸಿದ ಹಿಂಬರಹವನ್ನು ನೀಡಬೇಕು. ಸಾರ್ವಜನಿಕ ಮಾಹಿತಿ ಅಧಿಕಾರಿ ಮಾಹಿತಿ ನೀಡದಿದ್ದಲ್ಲಿ ಪ್ರಥಮ ಮೇಲ್ಮನವಿ ಪ್ರಾಧಿಕಾರಕ್ಕೆ ಸಲ್ಲಿಸಬೇಕು.
ಇಲ್ಲಿಯೂ ಸರಿಯಾದ ನ್ಯಾಯ ಸಿಗದಿದ್ದಲ್ಲಿ ಎರಡನೇ ಮೇಲ್ಮನವಿ ಪ್ರಾಧಿಕಾರವಾದ ಮಾಹಿತಿ ಹಕ್ಕು ರಾಜ್ಯ ಆಯೋಗಕ್ಕೆ ಮೇಲ್ಮನವಿ ಸಲ್ಲಿಸಬೇಕು ಎಂದು ತಿಳಿಸಿದರು.

ಎರಡನೇ ಮೇಲ್ಮನವಿ ಪ್ರಾಧಿಕಾರಕ್ಕೆ ಹೆಚ್ಚು ಪ್ರಕರಣಗಳು ಬಾರದಿರಲು ಸಾರ್ವಜನಿಕ ಮಾಹಿತಿ ಅಧಿಕಾರಿ ಮತ್ತು ಪ್ರಥಮ ಮೇಲ್ಮನವಿ ಪ್ರಾಧಿಕಾರಕ್ಕೆ ತರಬೇತಿ ಮೂಲಕ ಜಾಗೃತಿ ಮೂಡಿಸುವ ಮೂಲಕ ಪ್ರಕರಣಗಳನ್ನು ಗಣನೀಯವಾಗಿ ತಗ್ಗಿಸಬೇಕೆಂಬ ಉದ್ದೇಶ ಆಯೋಗ ಹೊಂದಿದೆ. ಈ ಹಿನ್ನಲೆಯಲ್ಲಿ ಮುಂದಿನ ದಿನಗಳಲ್ಲಿ ಅದಾಲತ್ ಮಾದರಿಯಲ್ಲಿ ಆಯಾ ಜಿಲ್ಲೆಗಳಲ್ಲಿ ಆಯೋಗ ಕಲಾಪ ನಡೆಸುವ ಮೂಲಕ ಇಲಾಖೆ ಅಧಿಕಾರಿಗಳಿಗೆ ಮತ್ತು ಅರ್ಜಿದಾರರಿಗೆ ಅನುಕೂಲ ಮಾಡಿಕೊಡಲು ಉದ್ದೇಶಿಸಲಾಗಿದೆ ಎಂದರು.

Exit mobile version