SUDDIKSHANA KANNADA NEWS/ DAVANAGERE/ DATE:10-11-2023
ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲು ಹಲವರು ಆಕಾಂಕ್ಷಿಗಳಿದ್ದಾರೆ. ಈ ನಡುವೆ ವಿನಯ್ ಕುಮಾರ್ ಅವರು ನನಗೆ ಟಿಕೆಟ್ ಸಿಗುತ್ತೆ ಎಂಬ ವಿಶ್ವಾಸದಲ್ಲಿದ್ದಾರೆ. ಈ ಮಧ್ಯೆ, ದಾವಣಗೆರೆ ಲೋಕಸಭಾ ಚುನಾವಣೆಯ ಉಸ್ತುವಾರಿ, ಸಚಿವ ಈಶ್ವರ ಖಂಡ್ರೆ ಅವರು ಇಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಏರ್ಪಡಿಸಿದ್ದ ಸಭೆಯಲ್ಲಿ ಭಾಗವಹಿಸಿ ಅಭಿಪ್ರಾಯ ಸಂಗ್ರಹಿಸಿದರು. ಈ ಬೆಳವಣಿಗೆ ನಡುವೆ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಸೊಸೆ ಡಾ. ಪ್ರಭಾ ಮಲ್ಲಿಕಾರ್ಜುನ್ ಸ್ಪರ್ಧೆ ಬಗ್ಗೆ ಪ್ರತಿಕ್ರಿಯೆ ನೀಡಿದರು.
ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಹೆಸರೂ ಸಹ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡುತ್ತಾರೆ ಎಂಬ ಮಾತು ಕೇಳಿ ಬರುತ್ತಿವೆ. ಪ್ರಭಾ ಮಲ್ಲಿಕಾರ್ಜುನ್ ಅವರು ಸಾಮಾಜಿಕ ಸೇವೆ ಮೂಲಕ ಜನರಿಗೆ ಹತ್ತಿರವಾಗುತ್ತಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಂತೂ ಸಕ್ರಿಯರಾಗಿ ದಾವಣಗೆರೆ ಉತ್ತರ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಪತಿ ಎಸ್. ಎಸ್. ಮಲ್ಲಿಕಾರ್ಜುನ್ ರ ಪರ ಭಾರೀ ಪ್ರಚಾರ ನಡೆಸಿದ್ದರು. ಮನೆ ಮನೆಗೆ ತೆರಳಿ ಮತಯಾಚಿಸಿದ್ದರು. ಈ ಮೂಲಕ ಮತದಾರರ ನಾಡಿಮಿಡಿತ ಅರಿಯುವ ಪ್ರಯತ್ನ ಮಾಡಿದ್ದರು.
ಇದಾದ ಬಳಿಕ ಪ್ರಭಾ ಮಲ್ಲಿಕಾರ್ಜುನ್ ಅವರು ಆರೋಗ್ಯ ಶಿಬಿರಗಳು, ಸಾಮಾಜಿಕ ಕಾರ್ಯಗಳು, ಬಡ ಮಕ್ಕಳಿಗೆ ನೆರವು, ಮಲ್ಲಿಕಾರ್ಜುನ್ ಅವರು ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ತೋಟಗಾರಿಕೆ ಸಚಿವರಾಗಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಕಾರಣ ಬ್ಯುಸಿ ಇರುತ್ತಾರೆ. ಹಾಗಾಗಿ, ಜನರ ಸಂಕಷ್ಟಗಳನ್ನು ಅರಿಯುವ ಪ್ರಯತ್ನ ಮಾಡಿದರಲ್ಲದೇ, ಕೆಲಸ ಮಾಡಿಕೊಡುತ್ತಿದ್ದಾರೆ. ಜೊತೆಗೆ ಜನರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಪ್ರಭಾ ಮಲ್ಲಿಕಾರ್ಜುನ್ ಅವರ ಹೆಸರು ಮುಂಚೂಣಿಯಲ್ಲಿತ್ತು.
ಅಭಿಪ್ರಾಯ ಸಂಗ್ರಹ ಸಭೆ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಶಾಮನೂರು ಶಿವಶಂಕರಪ್ಪ ಅವರು ಪ್ರಭಾ ಮಲ್ಲಿಕಾರ್ಜುನ್ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡುತ್ತಾರಾ ಎಂಬ
ಪ್ರಶ್ನೆಗೆ ಅವರ ಯಜಮಾನ್ರಿಗೆ ಕೇಳ್ರಿ ಎಂದು ಹೇಳಿದರು.
ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡಬೇಕು. ಒಬಿಸಿ ಪಟ್ಟಿಗೆ ವೀರಶೈವ ಲಿಂಗಾಯತ ಸಮಾಜದ ಪಂಗಡಗಳನ್ನು ಸೇರ್ಪಡೆ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ
ನಡೆಸಿದ ಕೂಡಲಸಂಗಮದ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಗುರುಗಳಾದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ಹೋರಾಟಕ್ಕೆ ಬೆಂಬಲ ಇದೆ ಎಂದ ಶಾಮನೂರು ಶಿವಶಂಕರಪ್ಪ ಅವರು, ಕೇಂದ್ರ ಸರ್ಕಾರವು ವೀರಶೈವ
ಲಿಂಗಾಯತ ಪಂಗಡಗಳನ್ನು ಒಬಿಸಿ ಪಟ್ಟಿಗೆ ಸೇರ್ಪಡೆ ಮಾಡಬೇಕೆಂಬ ಹೋರಾಟ ನ್ಯಾಯಸಮ್ಮತ. ಇದಕ್ಕೆ ನಮ್ಮ ಬೆಂಬಲ ಇದೆ. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷನಾಗಿದ್ದೇನೆ. ನಮ್ಮದು ಇದೇ ಬೇಡಿಕೆ
ಎಂದು ತಿಳಿಸಿದರು.
ಜಾತಿ ಗಣತಿ ಬಿಡುಗಡೆಗೆ ನಮ್ಮ ವಿರೋಧವಿದೆ. ವೈಜ್ಞಾನಿಕವಾಗಿ ಈ ವರದಿ ತಯಾರಿಸಿಲ್ಲ. ಕಳೆದ ಎಂಟು ವರ್ಷಗಳ ಹಿಂದೆ ಜಾತಿ ಗಣತಿ ಮಾಡಲಾಗಿದೆ. ಡಿಸೆಂಬರ್ ತಿಂಗಳಿನಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ
ಸಮ್ಮೇಳನ ನಡೆಯಲಿದ್ದು, 2 ಲಕ್ಷಕ್ಕಿಂತ ಹೆಚ್ಚಿನ ಜನರು ಆಗಮಿಸಲಿದ್ದಾರೆ. ಲಿಂಗಾಯತ ಸಮಾಜವನ್ನು ಕಡಿಮೆ ಸಂಖ್ಯೆ ತೋರಿಸುವ ಕೆಲಸ ಮಾಡಲಾಗಿದೆ. ಹಾಗಾಗಿ, ಜಾತಿಗಣತಿ ವರದಿ ಬಿಡುಗಡೆಗೆ ನಮ್ಮ ವಿರೋಧ ಇದೆ. ಹೊಸದಾಗಿ ಜಾತಿಗಣತಿ
ಮಾಡಬೇಕು ಎಂದು ಶಾಮನೂರು ಶಿವಶಂಕರಪ್ಪ ಹೇಳಿದರು.