SUDDIKSHANA KANNADA NEWS/ DAVANAGERE/ DATE:08-10-2023
ಬೆಂಗಳೂರು: ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳುವಂತೆ ಮಾಡಿದೆ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಹಾಗೂ ಸಿಎಂ ಸಿದ್ದರಾಮಯ್ಯ(Siddaramaiah)ರ ಭೇಟಿ. ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲಕ್ಕೂ ಕಾರಣವಾಗಿದೆ. ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಜೊತೆ ಮೈತ್ರಿಗೆ ಜೆಡಿಎಸ್ ಮುಂದಾಗಿದ್ದು, ಈ ಬೆಳವಣಿಗೆ ನಡುವೆ ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಜೆಡಿಎಸ್ ಬಿಟ್ಟಾಗಿನಿಂದಲೂ ದೇವೇಗೌಡರ ವಿರುದ್ಧವೇ ರಾಜಕಾರಣ ಮಾಡುತ್ತಿದ್ದ ಸಿದ್ದರಾಮಯ್ಯ ಅವರನ್ನು ಆತ್ಮೀಯವಾಗಿಯೇ ಹೆಚ್. ಡಿ. ದೇವೇಗೌಡರು ಮಾತನಾಡಿಸಿದರು. ಈ ವೇಳೆ ಸಿದ್ದರಾಮಯ್ಯ ಅವರು ದೇವೇಗೌಡರ
ಆರೋಗ್ಯ ವಿಚಾರಿಸಿದರು.

ಘಟಾನುಘಟಿ ರಾಜಕಾರಣಿಗಳ ಭೇಟಿಗೆ ಸಾಕ್ಷಿಯಾಗಿದ್ದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ. ಮಾಜಿ ಪ್ರಧಾನಿ ದೇವೇಗೌಡರನ್ನು ಅನಿರೀಕ್ಷಿತವಾಗಿ ಭೇಟಿಯಾದ ಸಿದ್ದರಾಮಯ್ಯರು ಸಹ ದೇವೇಗೌಡರಿಗೆ ಹಸ್ತಲಾಘವ
ನೀಡಿದರು.
CWC ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ , ಮಂಗಳೂರಿಗೆ ತೆರಳಲು ಆಗಮಿಸಿದ್ದ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಇವರ ಧರ್ಮಪತ್ನಿ ಚನ್ನಮ್ಮ ಅವರು ಅನಿರೀಕ್ಷಿತವಾಗಿ ಮುಖಾಮುಖಿಯಾದರು.
ಈ ವೇಳೆ ಮುಖ್ಯಮಂತ್ರಿಗಳು ದೇವೇಗೌಡರು ಮತ್ತು ಚನ್ನಮ್ಮ ಅವರ ಆರೋಗ್ಯ ವಿಚಾರಿಸಿದರು. ಬಳಿಕ ದೇವೇಗೌಡರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದರು. ಕೆಲ ಕಾಲ ಕುಶಲೋಪರಿ, ಮಾತುಕತೆ ಬಳಿಕ ಪರಸ್ಪರರು ಬೀಳ್ಕೊಟ್ಟರು. ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.