SUDDIKSHANA KANNADA NEWS/ DAVANAGERE/ DATE:08-02-2024
ದಾವಣಗೆರೆ: ರಾಜ್ಯದ ಮುಖ್ಯಮಂತ್ರಿಗಳು ಬೆಂಗಳೂರಿನ ವಿಧಾನಸೌಧ ಮುಂಭಾಗದಲ್ಲಿ ರಾಜ್ಯ ಮಟ್ಟದ ಜನಸ್ಪಂದನವನ್ನು ಫೆಬ್ರವರಿ 8 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ನಡೆಸಲಿದ್ದು ಎಲ್ಲಾ ಅಧಿಕಾರಿಗಳು ಅವರ ಕೇಂದ್ರಸ್ಥಾನದಲ್ಲಿ ಕಡ್ಡಾಯವಾಗಿ ಹಾಜರಿರಬೇಕೆಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ತಿಳಿಸಿದರು.
ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯ ಮಟ್ಟದಲ್ಲಿ ಜನಸ್ಪಂದನ ನಡೆಯಲಿರುವುದರಿಂದ ಅಲ್ಲಿ ಸಲ್ಲಿಕೆಯಾಗುವ ಜನರ
ಕುಂದುಕೊರತೆ ಆಲಿಸಲು ಅಲ್ಲಿಂದ ನೇರವಾಗಿ ದೂರವಾಣಿ ಮೂಲಕ, ವೀಡಿಯೋ ಕಾನ್ಪರೆನ್ಸ್ ಮೂಲಕ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದ್ದು ಎಲ್ಲರೂ ಅವರ ಕೇಂದ್ರಸ್ಥಾನದಲ್ಲಿ ಹಾಜರಿರಬೇಕು ಎಂದರು.
ಕಳೆದ ತಿಂಗಳು ಮುಖ್ಯಮಂತ್ರಿಗಳ ಜನಸ್ಪಂದನಕ್ಕೆ ಸಲ್ಲಿಕೆಯಾಗಿದ್ದ ಜಿಲ್ಲೆಗೆ ಸಂಬಂಧಿಸಿದ ಅರ್ಜಿಗಳಲ್ಲಿ 43 ಅರ್ಜಿಗಳು ಬಾಕಿ ಇದ್ದು ಇದನ್ನು ಒಂದೇ ದಿನದಲ್ಲಿ ಇತ್ಯರ್ಥ ಮಾಡಲು ಸೂಚನೆ ನೀಡಿದರು.
ಸಂವಿಧಾನ ಜಾಗೃತಿ ಜಾಥಾ; ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ನಡೆಯುತ್ತಿದ್ದು ಎಲ್ಲಾ ಅಧಿಕಾರಿಗಳು ಜಾಥಾ ಕಾರ್ಯಕ್ರಮದ ಅಂಗವಾಗಿ ಅವರ ಇಲಾಖೆಯಿಂದ ರಚನಾತ್ಮಕ ಕಾರ್ಯಕ್ರಮಗಳನ್ನು
ಹಮ್ಮಿಕೊಳ್ಳುವ ಮೂಲಕ ಸಂವಿಧಾನದ ಕುರಿತು ಜಾಗೃತಿ ಮೂಡಿಸಲು ಮುಂದಾಗಬೇಕೆಂದು ಸೂಚನೆ ನೀಡಿದರು. ಜಾಥಾ ಅಂಗವಾಗಿ ಶಾಲಾ, ಕಾಲೇಜಿನ ವಿದ್ಯಾರ್ಥಿಗಳಿಗೆ ವಿವಿಧ ಭಾಷಣ, ಪ್ರಬಂಧ ಸ್ಪರ್ಧೆಗಳನ್ನು
ಏರ್ಪಡಿಸಲು ಮುಂದಾಗಬೇಕು. ಶಿಕ್ಷಕರು ಮತ್ತು ಉಪನ್ಯಾಸಕರು, ರೈತರು, ಸ್ತ್ರೀಶಕ್ತಿ ಸಂಘದ ಸದಸ್ಯರು ಸಹ ಸಕ್ರಿಯವಾಗಿ ಜಾಥಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಲು ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.