SUDDIKSHANA KANNADA NEWS/ DAVANAGERE/ DATE:03-01-2025
ಬೆಂಗಳೂರು: ಟೆಲಿ ಮಾನಸ್ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿದ್ದು, ರಾಜ್ಯದಲ್ಲಿ ಮಾನಸಿಕ ಆರೋಗ್ಯದ ಬೆಂಬಲ ಅಗತ್ಯವಿರುವ ಸುಮಾರು 17 ಲಕ್ಷ ಜನರು ಇದರ ಪ್ರಯೋಜನ ಪಡೆದಿದ್ದಾರೆ. ನಿಮ್ಹಾನ್ಸ್ ಮತ್ತು ಧಾರವಾಡದ ಡಿಮ್ಹಾನ್ಸ್ ಗಳಲ್ಲಿ ಈ ಘಟಕಗಳ ಕಾರ್ಯ ನಿರ್ವಹಿಸುತ್ತಿದ್ದು, ಅಗತ್ಯ ಆರೋಗ್ಯ ಸೇವೆಯನ್ನು ಕಲ್ಪಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ, ಬೆಂಗಳೂರು ಇವರ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ “ಸುವರ್ಣ ಮಹೋತ್ಸವ” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಮ್ಮ ದೇಶದ ಹೆಮ್ಮೆಯ ಮಾನಸಿಕ ಆರೋಗ್ಯ ಮತ್ತು ನರರೋಗಗಳ ರಾಷ್ಟ್ರೀಯ ಸಂಸ್ಥೆ ನಿಮ್ಹಾನ್ಸ್ನ ಸುವರ್ಣ ಮಹೋತ್ಸವ ಆಚರಣೆಯಲ್ಲಿ ಪಾಲ್ಗೊಳ್ಳುವುದು ನನಗೆ ಅತ್ಯಂತ ಹೆಮ್ಮೆಯ ಸಂಗತಿ. ನಿಮ್ಹಾನ್ಸ್ ಕಳೆದ ಐದು ದಶಕಗಳ ಅವಧಿಯಲ್ಲಿ ದೇಶದ ಮಾನಸಿಕ ಆರೋಗ್ಯ ಹಾಗೂ ನರರೋಗಗಳ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆ ನೀಡುತ್ತಾ ಬಂದಿದ್ದು, ದೇಶದ ಪ್ರಮುಖ ಸಂಸ್ಥೆಯಾಗಿ ತನ್ನ ಛಾಪು ಮೂಡಿಸಿದೆ ಎಂದರು.
ಮೈಸೂರು ಸರ್ಕಾರದ ಮಾನಸಿಕ ಆಸ್ಪತ್ರೆ ಮತ್ತು ಭಾರತೀಯ ಮಾನಸಿಕ ಆರೋಗ್ಯ ಸಂಸ್ಥೆಯನ್ನು ಒಗ್ಗೂಡಿಸುವ ಮೂಲಕ ಪ್ರಾರಂಭವಾದ ನಿಮ್ಹಾನ್ಸ್, ಮಾನಸಿಕ ಆರೋಗ್ಯ ಮತ್ತು ಶಿಕ್ಷಣಕ್ಕೆ ಮೀಸಲಾದ ಭಾರತದ ಪ್ರಪ್ರಥಮ ಸಂಸ್ಥೆ ಎಂಬ ‘ಹೆಗ್ಗಳಿಕೆ ಹೊಂದಿದೆ. ರಾಷ್ಟ್ರೀಯ ಮಹತ್ವವನ್ನು ಹೊಂದಿರುವ ಈ ಸಂಸ್ಥೆಯು ತನ್ನ ಐದು ದಶಕದ ಪಯಣದಲ್ಲಿ ಆರೈಕೆ, ಸಂಶೋಧನೆ ಮತ್ತು ಶಿಕ್ಷಣ ವಲಯದಲ್ಲಿ ವಿಶ್ವದ ಗಮನ ಸೆಳೆದಿದೆ. ಮಾನಸಿಕ ಆರೋಗ್ಯ ಕುರಿತಾದ ನೀತಿ ನಿರೂಪಣೆಯಲ್ಲಿ ನಿಮ್ಹಾನ್ಸ್ ಕೊಡುಗೆಯನ್ನು ಜಾಗತಿಕವಾಗಿ ಗುರುತಿಸಲಾಗಿರುವುದು ಹೆಮ್ಮೆಯ ಸಂಗತಿ ಎಂದು ತಿಳಿಸಿದರು.
ಮಾನಸಿಕ ಆರೋಗ್ಯದ ಆರೈಕೆ ಜೊತೆಗೆ ರೋಗದ ಕುರಿತಾಗಿ ಸಾಮಾನ್ಯವಾಗಿ ಅಂಟಿಕೊಳ್ಳುವ ಸಮಾಜದ ನಕರಾತ್ಮಕ ದೃಷ್ಟಿಕೋನವನ್ನು ಬಹುತೇಕ ನಿವಾರಿಸುವಲ್ಲಿ ನಿಮ್ಹಾನ್ಸ್ ಯಶಸ್ವಿಯಾಗಿದೆ. ಪಾರ್ಶ್ವವಾಯು, ತೀವ್ರತರ ಮೆದುಳು ಕಾಯಿಲೆಗಳು ಮತ್ತು ನರರೋಗ ಚಿಕಿತ್ಸೆಯಲ್ಲಿ ಅತ್ಯುತ್ತಮ ಗುಣಮಟ್ಟವನ್ನು ಸಾಧಿಸುವ ಮೂಲಕ ಮಾನಸಿಕ ಸ್ವಾಸ್ಥ್ಯ ಕಾಪಾಡುವಲ್ಲಿ ನಿಮ್ಹಾನ್ಸ್ ಕೊಡುಗೆ ಶ್ಲಾಘನೀಯವಾಗಿದೆ ಎಂದರು.
ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಶ್ರೇಷ್ಠತೆಯನ್ನು ಸಾಧಿಸಿರುವ ರಾಷ್ಟ್ರೀಯ ಮಹತ್ವದ ಈ ಸಂಸ್ಥೆ ಕರ್ನಾಟಕದಲ್ಲಿರುವುದು ನಮಗೆಲ್ಲರಿಗೂ ಅತ್ಯಂತ ಹೆಮ್ಮೆಯ ವಿಷಯ. ರಾಜ್ಯದಾದ್ಯಂತ ಮಾನಸಿಕ ಆರೋಗ್ಯ ಸೇವೆಯನ್ನು ಕಲ್ಪಿಸಲು ಸರ್ಕಾರ ನಿಮ್ಹಾನ್ಸ್ನೊಂದಿಗೆ ಜೊತೆಗೂಡಿ ಕಾರ್ಯನಿರ್ವಹಿಸುತ್ತಿದೆ. ನಿಮ್ಹಾನ್ಸ್ನೊಂದಿಗಿನ ಜಂಟಿ ಸಹಭಾಗಿತ್ವದ ಮೂಲಕ ರಾಜ್ಯದ ಪ್ರತಿಯೊಬ್ಬರಿಗೂ ಮಾನಸಿಕ ಆರೋಗ್ಯ ಸೇವೆಯನ್ನು ಖಾತ್ರಿಪಡಿಸಲು ನಮಗೆ ಸಾಧ್ಯವಾಗಿದೆ. ನಮ್ಮ ಸರ್ಕಾರ ಮಾನಸಿಕ ಆರೋಗ್ಯ ಸೇವೆಯನ್ನು ಒದಗಿಸಲು ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ಜಿಲ್ಲಾ ಮತ್ತು ತಾಲೂಕು
ಮಟ್ಟಗಳಲ್ಲಿ ಆತ್ಮಹತ್ಯೆ ತಡೆ, ದುಶ್ಚಟ ಹೊಂದಿದವರ ಪುನರ್ವಸತಿ ಮತ್ತು ಸಮುದಾಯ ಮಾನಸಿಕ ಆರೋಗ್ಯ ಕಾರ್ಯಕ್ರಮಗಳಿಗೆ ಒತ್ತು ನೀಡಿದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರ ನೀತಿ ಆಯೋಗ, ನಿಮ್ಹಾನ್ಸ್ ಸಹಯೋಗದಲ್ಲಿ ಆರಂಭಿಸಿರುವ ಕರ್ನಾಟಕ ಬ್ರೈನ್ ಹೆಲ್ತ್ ಇನೀಷಿಯೇಟಿವ್, ನರರೋಗ ಆರೈಕೆಯಲ್ಲಿ ತಜ್ಞರ ಸೇವೆಯನ್ನು ಜಿಲ್ಲಾಮಟ್ಟದಲ್ಲಿಯೂ ಲಭ್ಯವಾಗಿಸಿದೆ. ತೀವ್ರತರ ಪಾರ್ಶ್ವವಾಯು ಮತ್ತು ನರರೋಗ ಆಘಾತ ಆರೈಕೆಯಲ್ಲಿ ತರಬೇತಿ ಮತ್ತು ನಾವೀನ್ಯತಾ ಮಾದರಿಗಳನ್ನು ಈ ಯೋಜನೆ ಸಾಧ್ಯವಾಗಿಸಿದೆ. ನಗರ ಮತ್ತು ಗ್ರಾಮೀಣ ಜನಸಂಖ್ಯೆಗೆ ಸೇವಾ ಲಭ್ಯತೆಯಲ್ಲಿ ಏಕರೂಪತೆ ತರಲು ರಾಜ್ಯ ಸರ್ಕಾರವು ಮಾನಸಿಕ ಆರೋಗ್ಯವನ್ನು ಪ್ರಾಥಮಿಕ ಆರೋಗ್ಯ ಸೇವಾ ವ್ಯವಸ್ಥೆಯಲ್ಲಿ ಸಂಯೋಜಿಸಿದೆ. ನಿಮ್ಹಾನ್ಸ್ ಸಂಸ್ಥೆಯ ಕಾರ್ಯನಿರ್ವಹಣೆಗಾಗಿ ಪ್ರತಿವರ್ಷ 137 ಕೋಟಿ ರೂ.ಗಳನ್ನು ಒದಗಿಸುವ ಮೂಲಕ ರಾಜ್ಯ ಸರ್ಕಾರ ತನ್ನ ಬದ್ಧತೆಯನ್ನು ನಿರೂಪಿಸಿದೆ ಎಂದರು.
ರಾಷ್ಟ್ರಪತಿ ದ್ರೌಪದಿ ವರ್ಮು, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸಂಸದ ತೇಜಸ್ವಿ ಸೂರ್ಯ ಮತ್ತಿತರರು ಹಾಜರಿದ್ದರು.