Site icon Kannada News-suddikshana

ರಾಜಕೀಯ “ಕಿಚ್ಚಿ”ಗೆ ಕಾರಣವಾದ ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು ಎಂಬ ಬರಹ, ಕಾಂಗ್ರೆಸ್ ಹಿಂದೂ ವಿರೋಧಿ ನೀತಿಗೆ ಇದಕ್ಕಿಂತ ಸಾಕ್ಷಿ ಬೇಕಾ : ವಿಜಯೇಂದ್ರ ಯಡಿಯೂರಪ್ಪ ಕಿಡಿಕಿಡಿ

SUDDIKSHANA KANNADA NEWS/ DAVANAGERE/ DATE:19-02-2024

ಬೆಂಗಳೂರು: ಶಾಲೆ ದೇಗುಲವಿದು, ಕೈ ಮುಗಿದು ಒಳಗೆ ಬಾ ಎಂಬ ಬರಹವನ್ನು ತೆಗೆದು ಶಾಲೆ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು ಎಂದು ಬದಲಾವಣೆ ಮಾಡಿರುವುದು ರಾಜಕೀಯ ವಿವಾದದ ಬಿರುಗಾಳಿ ಎಬ್ಬಿಸಿದೆ.

ಶಾಲೆಗಳೆಂದರೆ ಪವಿತ್ರ ತಾಣ. ಇದನ್ನು ಅರ್ಥೈಸಿಕೊಳ್ಳದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ಮನಸ್ಥಿತಿಗೆ ಸಾಕ್ಷಿಯಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಯಡಿಯೂರಪ್ಪ ಕಿಡಿಕಾರಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ವಿಜಯೇಂದ್ರ ಯಡಿಯೂರಪ್ಪ ಅವರು, ಇಲಾಖೆಯ ಹಿರಿಯ IAS ಅಧಿಕಾರಿಯ ಮೂಲಕ ಸರ್ಕಾರಿ ವಸತಿ ಶಾಲೆಗಳ ದ್ವಾರದಲ್ಲಿ ಬರೆಸಲಾಗಿದ್ದ “ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ” ಎಂಬ ಘೋಷವಾಕ್ಯವನ್ನು ಬದಲಿಸಿ “ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ” ಎಂದು ಬರೆಸಲು ಪ್ರಾರಂಭಿಸಿದೆ. ಇದು ಖಂಡನೀಯ ಎಂದಿದ್ದಾರೆ.

ಮೊನ್ನೆಯಷ್ಟೇ ಇದೇ ಶಾಲೆಗಳಲ್ಲಿ ಧಾರ್ಮಿಕ ಹಬ್ಬ , ಪೂಜೆಗಳಿಗೆ ನಿಷೇಧ ಹೇರಿ ಆದೇಶ ಹೊರಡಿಸಿ ಇದರಿಂದ ‘ಕೈ’ಸುಡಲು ಆರಂಭವಾದ ಬೆನ್ನಲ್ಲೇ ಆದೇಶ ಹಿಂಪಡೆದು ತನ್ನ ಹಿಂದೂ ವಿರೋಧಿ ಮನಸ್ಥಿತಿಯನ್ನು ಅದುಮಿಟ್ಟುಕೊಂಡಿದ್ದ ಸರ್ಕಾರ ಇದೀಗ ಮತ್ತೊಂದು ಮತಿಗೇಡಿತನಕ್ಕೆ ‘ಕೈ’ಹಾಕಿ ವಿಕೃತಿ ಮೆರೆದಿದೆ, ಜತೆಗೇ ವಿದ್ಯಾರ್ಥಿಗಳನ್ನು ಶಿಕ್ಷಕರ ವಿರುದ್ಧ ಎತ್ತಿಕಟ್ಟಲು ಈ ಸಾಲುಗಳು ಪ್ರಚೋದನೆ ನೀಡುವಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೈ ಮುಗಿದು ಒಳೆಗೆ ಬಾ ….ಎಂಬ ರಾಷ್ಟ್ರಕವಿ ಕುವೆಂಪು ಅವರ ಪದ್ಯದ ಸಾಲುಗಳಿಂದ ಪ್ರೇರಣೆ ಪಡೆದು ನಾಡಿನ ಅನೇಕ ಶಿಕ್ಷಣ ಸಂಸ್ಥೆಗಳು ‘”ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ” ಎಂದು ಘೋಷವಾಕ್ಯ
ಬರೆಸಿವೆ, ಇದನ್ನೇ ಸರ್ಕಾರಿ ಶಾಲೆಗಳಲ್ಲೂ ಅನುಸರಿಸಲಾಗಿದೆ. ‘ವಿದ್ಯಾ ದದಾತಿ ವಿನಯಂ….ವಿದ್ಯೆ ಎಂದರೆ ವಿನಯ, ವಿನಯ ವಿದ್ದೆಡೆ ಮಾತ್ರ ವಿದ್ಯೆ ಒಲಿಯುವುದು, ವಿದ್ಯಾಲಯವನ್ನು ದೇಗುಲದಂತೆ ಭಾವಿಸಿ “ಕೈ ಮುಗಿದು ಒಳಗೆ ಬನ್ನಿ’’ ಎಂಬ ಸದ್ವಿನಯ, ಸಂಸ್ಕಾರ, ಶ್ರದ್ಧಾಗುಣಗಳನ್ನು ನೆನಪಿಸುವ ಈ ಸಾಲು ಯಾವ ಧರ್ಮದವರನ್ನು ನೋಯಿಸುತ್ತದೋ ತಿಳಿಯದಾಗಿದೆ? ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಕಾಂಗ್ರೆಸ್ ಸರ್ಕಾರವೇ ಜನರಿಗೆ ಸ್ಪಷ್ಟನೆ ನೀಡಬೇಕಿದೆ. ದೇಶದ ಆರನೇ ಹಾಗೂ ಕರ್ನಾಟಕ ರಾಜ್ಯದ ಮೊದಲನೇ ವಿಶ್ವವಿದ್ಯಾಲಯವಾಗಿರುವ ಶ್ರೀಮನ್ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ಮೈಸೂರು ವಿಶ್ವವಿದ್ಯಾಲಯದ ಧ್ಯೇಯ ವಾಕ್ಯ ‘ನಹಿ ಜ್ಞಾನೇನ ಸದೃಶಂ’ ಅಂದರೆ ‘ಜ್ಞಾನಕ್ಕೆ ಸಮನಾದುದು ಯಾವುದು ಇಲ್ಲ’ ಎಂಬುದು, ಈ ಘೋಷವಾಕ್ಯ ವಿಶ್ವವಿದ್ಯಾಲಯದ ಕಾರ್ಯಸೌಧವನ್ನು ಅಲಂಕರಿಸಿದೆ ಜತೆಗೇ ವಿದ್ಯೆಯ ಅಧಿದೇವತೆ ಸರಸ್ವತಿಯನ್ನೂ ಪಡಿಮೂಡಿಸಲಾಗಿದೆ. ತನ್ನ ಅಧೀನದಲ್ಲಿದೆ ಎಂಬ ಅಹಃ ನಿಂದ , ಭಗವದ್ಗೀತೆಯ ಈ ಶ್ಲೋಕ ಹಾಗೂ ಸರಸ್ವತಿಯನ್ನು ತೆಗೆಸುವ ಐತಿಹಾಸಿಕ ಪ್ರಮಾದ ವೆಸಗಲೂ ಈ ಕಾಂಗ್ರೆಸ್ ಸರ್ಕಾರ ಹಿಂದೇಟು ಹಾಕುವುದಿಲ್ಲ ಎನಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

ವಸತಿ ಶಾಲೆಗಳ ಮೇಲೆ ಬರೆಸಲಾಗಿದ್ದ ಈ ಹಿಂದಿನ “ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ” ಘೋಷ ವಾಕ್ಯ ಮತ್ತೆ ಬರೆಸದೇ ಹೋದರೆ ಹಾಗೂ ಈ ಆದೇಶದ ಹಿಂದಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ
ಕೈಗೊಳ್ಳದೇ ಹೋದರೆ ಮುಂದಾಗುವ ಪರಿಣಾಮಗಳನ್ನು ಸರ್ಕಾರ ಎದುರಿಸಬೇಕಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

Exit mobile version