SUDDIKSHANA KANNADA NEWS/ DAVANAGERE/ DATE:17-03-2025
ಬೆಂಗಳೂರು: ಲೋಕಸಭಾ ಚುನಾವಣೆ ನಂತರದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುವುದು ಎಂದು ಸುಳ್ಳು ಆರೋಪ, ಅಪಪ್ರಚಾರ ಮಾಡಿದಿರಿ. ಜನರಿಗೆ ಈ ಕಾರ್ಯಕ್ರಮಗಳ ಸತ್ಯಾಸತ್ಯತೆ ಗೊತ್ತಿದೆ. ಫಲಾನುಭವಿಗಳಿಗೆ ಇದರಿಂದ ಪ್ರಯೋಜನವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಅವರು, ಜೂನ್ 11, 2023 ರಿಂದ 410 ಕೋಟಿ ಜನ ಶಕ್ತಿ ಯೋಜನೆಯಡಿ ಓಡಾಡಿದ್ದಾರೆ. ನೀವು ಎಷ್ಟೇ ಸುಳ್ಳು ಹೇಳಿದರೂ ಉಪಚುನಾವಣೆಯಲ್ಲಿ ಮೂರು ಸ್ಥಾನಗಳನ್ನು ಸೋತಿದ್ದೀರಿ. ನಿಮ್ಮ ಟೀಕೆ, ಆಪಾದನೆಗಳು ಮಾಡಿದ ನಂತರ ಉಪಚುನಾವಣೆಗಳು ನಡೆದಿವೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟ ಗೆದ್ದಿದ್ದ ಚನ್ನಪಟ್ಟಣ ಕ್ಷೇತ್ರದಲ್ಲಿ 25 ಸಾವಿರಕ್ಕೂ ಹೆಚ್ಚು ಅಂತರದಿಂದ ಗೆದ್ದಿದ್ದೇವೆ. ಶಿಗ್ಗಾಂವಿ ಕ್ಷೇತ್ರದಲ್ಲಿ13 ಸಾವಿರ ಅಂತರದಿಂದ ಹಾಗೂ ಸಂಡೂರು ಕ್ಷೇತ್ರದಲ್ಲಿ 9 ಸಾವಿರ ಅಂತರದಲ್ಲಿ ಗೆದ್ದಿದ್ದೇವೆ. ಮೂರೂ ಕಡೆ ಮಕಾಡೆ ಮಲಗಿದಿರಿ ನೀವು. ಜನರನ್ನು ಮೂರ್ಖರನ್ನಾಗಿಸಲು ಪ್ರಯತ್ನಿಸಿದರೆ ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು.
ಎರಡು ಬಾರಿ ಅಧಿಕಾರ ಮಾಡಿರುವ ನೀವು ಜನರ ಆಶೀರ್ವಾದದಿಂದ ಗೆದ್ದಿದ್ದೀರೇ? ಆಪರೇಶನ್ ಕಮಲ ಮಾಡಿ 18 ಕ್ಷೇತ್ರಗಳನ್ನು ಗೆದ್ದಿರಿ ಎಂದು ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರನ್ನು ಟೀಕಿಸಿದರು.
ಬಸವರಾಜ ಬೊಮ್ಮಾಯಿ ಅವರ ಮಗನ ವಿರುದ್ಧ ಗೆಲ್ಲಬೇಕಾದರೆ ಎಲ್ಲಾ ಜಾತಿ ಜನರು ಮತ ನೀಡಿದ್ದರಿಂದ ನಾವು ಗೆದ್ದಿದ್ದೇವೆ. ನಾವು ಅಪರೇಶನ್ ಕಾಂಗ್ರೆಸ್ ಮಾಡಿಲ್ಲ. ನಾವು ಗ್ಯಾರಂಟಿ ಕೊಡದೇ ಹೋಗಿದ್ದರೆ ಬಡವರು ಮತ ಹಾಕುತ್ತಿರಲಿಲ್ಲ. ಮಧ್ಯವರ್ತಿಗಳಿಲ್ಲದೇ ನೇರವಾಗಿ ಫಲಾನುಭವಿಗಳ ಖಾತೆಗೆ ತಲುಪುವ ಈ ಯೋಜನೆಗಳು ಬಡವರ ಬದುಕಿಗೆ ಭರವಸೆ ನೀಡಿವೆ ಎಂದು ತಿಳಿಸಿದರು.