ಭೋಪಾಲ್: ಮಾಡೆಲ್ ಕಂ ನಟಿ ಟ್ವಿಶಾ ಶರ್ಮಾ ಅವರ ಶಂಕಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ, ಕೇಂದ್ರ ತನಿಖಾ ದಳ (ಸಿಬಿಐ) ಬುಧವಾರ ಅವರ ಪತಿ ಸಮರ್ಥ್ ಸಿಂಗ್ನನ್ನು ತನ್ನ ಕಸ್ಟಡಿಗೆ ಪಡೆದುಕೊಂಡಿದೆ. ಭೋಪಾಲ್ನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಆರೋಪಿಯನ್ನು ಸಿಬಿಐ ಕಸ್ಟಡಿಗೆ ಒಪ್ಪಿಸಿ ಆದೇಶ ಹೊರಡಿಸಿದೆ.
ನ್ಯಾಯವಾದಿಯಾಗಿರುವ ಸಮರ್ಥ್ ಸಿಂಗ್ನನ್ನು ಮಧ್ಯಪ್ರದೇಶ ಪೊಲೀಸರ ವಿಶೇಷ ತನಿಖಾ ತಂಡ (SIT) ಮೇ 22 ರಂದು ಜಬಲ್ಪುರದಲ್ಲಿ ಬಂಧಿಸಿತ್ತು. ಕೋರ್ಟ್ ಆತನನ್ನು ಮೇ 29 ರವರೆಗೆ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿತ್ತು. ಆದರೆ, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಈ ಹೈಪ್ರೊಫೈಲ್ ಪ್ರಕರಣದ ತನಿಖೆಯನ್ನು ಸಿಬಿಐ ಅಧಿಕೃತವಾಗಿ ವಹಿಸಿಕೊಂಡಿರುವುದರಿಂದ, ಇನ್ನು ಮುಂದೆ ರಾಜ್ಯ ಪೊಲೀಸರ ಎಸ್ಐಟಿ ಕಸ್ಟಡಿಯ ಅಗತ್ಯವಿಲ್ಲ ಎಂದು ವಕೀಲ ಅಂಕುರ್ ಪಾಂಡೆ ತಿಳಿಸಿದ್ದಾರೆ. ಹೀಗಾಗಿ ಬುಧವಾರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ, ಸಿಬಿಐ ತನ್ನ ಕಸ್ಟಡಿಗೆ ನೀಡುವಂತೆ ಕೋರಿತು. ಕೋರ್ಟ್ ಈ ಮನವಿಯನ್ನು ಪುರಸ್ಕರಿಸಿ ಸಮರ್ಥ್ನನ್ನು ಸಿಬಿಐ ಕಸ್ಟಡಿಗೆ ಒಪ್ಪಿಸಿದೆ.
ಪ್ರಕರಣದ ಹಿನ್ನೆಲೆ:
ಮಾಜಿ ಮಾಡೆಲ್ ಮತ್ತು ನಟಿಯಾಗಿದ್ದ 33 ವರ್ಷದ ಟ್ವಿಶಾ ಶರ್ಮಾ, ಮೇ 12 ರಂದು ಭೋಪಾಲ್ನ ಕಟಾರಾ ಹಿಲ್ಸ್ನಲ್ಲಿರುವ ತಮ್ಮ ಪತಿಯ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದರು. 2025ರ ಡಿಸೆಂಬರ್ನಲ್ಲಿ ಇವರ ವಿವಾಹವಾಗಿತ್ತು. ಮದುವೆಯಾದ ಕೆಲವೇ ತಿಂಗಳುಗಳಲ್ಲಿ ವರದಕ್ಷಿಣೆಗಾಗಿ ಪತಿ ಸಮರ್ಥ್ ಸಿಂಗ್ ಮತ್ತು ಆತನ ತಾಯಿ, ನಿವೃತ್ತ ನ್ಯಾಯಾಧೀಶೆ ಗಿರಿಬಾಲಾ ಸಿಂಗ್ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದರು ಎಂದು ಟ್ವಿಶಾ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಕಿರುಕುಳ ತಾಳಲಾರದೆ ಟ್ವಿಶಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಎಫ್ಐಆರ್ ದಾಖಲಿಸಲಾಗಿದೆ.
ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಸಮರ್ಥ್ 10 ದಿನಗಳ ಕಾಲ ತಲೆಮರೆಸಿಕೊಂಡಿದ್ದನು. ಇತ್ತೀಚೆಗಷ್ಟೇ ಮಧ್ಯಪ್ರದೇಶ ಹೈಕೋರ್ಟ್ ಆದೇಶದ ಮೇರೆಗೆ ದೆಹಲಿ ಏಮ್ಸ್ (AIIMS) ವೈದ್ಯರ ತಂಡ ಟ್ವಿಶಾ ಅವರ ಎರಡನೇ ಮರಣೋತ್ತರ ಪರೀಕ್ಷೆಯನ್ನು ನಡೆಸಿತ್ತು. ಸದ್ಯ ಪ್ರಕರಣವನ್ನು ಕೈಗೆತ್ತಿಕೊಂಡಿರುವ ಸಿಬಿಐ, ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ವರದಕ್ಷಿಣೆ ಸಾವು ಮತ್ತು ಕ್ರೌರ್ಯದ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದೆ





Leave a comment