ಮುಂಬೈ: 15 ವರ್ಷದ ಉದಯೋನ್ಮುಖ ಬ್ಯಾಟಿಂಗ್ ತಾರೆ ವೈಭವ್ ಸೂರ್ಯವಂಶಿ ಅವರ ದೀರ್ಘಕಾಲದ ಕ್ರಿಕೆಟ್ ಭವಿಷ್ಯಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ವಿಶೇಷ ಯೋಜನೆ ರೂಪಿಸಿದೆ. ಭಾರತೀಯ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರಂತೆ ವೈಭವ್ ಕೂಡ ಸುದೀರ್ಘ ಕಾಲ ದೇಶಕ್ಕೆ ಸೇವೆ ಸಲ್ಲಿಸುವಂತೆ ಅವರನ್ನು ಅತ್ಯಂತ ಎಚ್ಚರಿಕೆಯಿಂದ ಪೋಷಿಸಲು ಮಂಡಳಿ ನಿರ್ಧರಿಸಿದೆ.
ಮುಂಬೈನಲ್ಲಿ ನಡೆದ ಬಿಸಿಸಿಐ ಉನ್ನತ ಮಟ್ಟದ ಪರಿಶೀಲನಾ ಸಭೆಯ ನಂತರ ಮಾತನಾಡಿದ ಕಾರ್ಯದರ್ಶಿ ದೇವಜಿತ್ ಸೈಕಿಯಾ, “ವೈಭವ್ ಸೂರ್ಯವಂಶಿ ಅವರನ್ನು ನಾವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದೇವೆ. ಅವರು ಕೇವಲ ಒಂದು ಸರಣಿ ಅಥವಾ ಒಂದು ವರ್ಷದ ವಂಡರ್ ಆಗಿ ಉಳಿಬಾರದು, ಸುದೀರ್ಘ ಕಾಲ ಅಂತರರಾಷ್ಟ್ರೀಯ ಮಟ್ಟದಲ್ಲಿ ಮಿಂಚಬೇಕು ಎಂಬುದು ನಮ್ಮ ಉದ್ದೇಶ. ಅವರ ಪ್ರತಿಯೊಂದು ಹೆಜ್ಜೆಯನ್ನೂ ಮಂಡಳಿ ಹತ್ತಿರದಿಂದ ನಿಗಾ ವಹಿಸುತ್ತಿದೆ” ಎಂದು ತಿಳಿಸಿದ್ದಾರೆ.
ದುಲೀಪ್ ಟ್ರೋಫಿ ಸೆಮಿಫೈನಲ್ನಲ್ಲಿ ಈಸ್ಟ್ ಝೋನ್ ಪರ 81 ಎಸೆತಗಳಲ್ಲಿ 92 ರನ್ ಸಿಡಿಸಿ, ಈ ಟೂರ್ನಿಯ ಇತಿಹಾಸದಲ್ಲೇ ಅರ್ಧಶತಕ ಬಾರಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ದಾಖಲೆಯನ್ನು ವೈಭವ್ ಬರೆದಿದ್ದರು. ಸೆಪ್ಟೆಂಬರ್ 6 ರಿಂದ ಆರಂಭವಾಗಲಿರುವ ದುಲೀಪ್ ಟ್ರೋಫಿ ಫೈನಲ್ನಲ್ಲಿ ಅವರು ಆಡುವುದು ಹೆಡ್ ಕೋಚ್ ಗೌತಮ್ ಗಂಭೀರ್ ಅವರ ನಿರ್ಧಾರವನ್ನು ಅವಲಂಬಿಸಿದೆ.
ಕೇವಲ ವೈಭವ್ ಮಾತ್ರವಲ್ಲದೆ, ಬಿಸಿಸಿಐನ ‘ಸೆಂಟರ್ ಆಫ್ ಎಕ್ಸಲೆನ್ಸ್’ (CoE) ಮೂಲಕ ಸುಮಾರು 10 ರಿಂದ 15 ಯುವ ಭರವಸೆಯ ಆಟಗಾರರನ್ನು ಗುರುತಿಸಲಾಗಿದ್ದು, ಅವರಿಗೆ ವಿ.ವಿ.ಎಸ್. ಲಕ್ಷ್ಮಣ್ ನೇತೃತ್ವದಲ್ಲಿ ವಿಶೇಷ ತರಬೇತಿ ನೀಡಲಾಗುತ್ತಿದೆ. ವೈಭವ್ ಮುಂಬರುವ ಸೆಪ್ಟೆಂಬರ್ 13 ರಿಂದ ಆರಂಭವಾಗಲಿರುವ ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿ ಹಾಗೂ ಏಷ್ಯನ್ ಗೇಮ್ಸ್ ಭಾರತ ತಂಡದಲ್ಲೂ ಭಾಗವಹಿಸಲಿದ್ದಾರೆ.





Leave a comment