SUDDIKSHANA KANNADA NEWS/ DAVANAGERE/ DATE:26-02-2024
ದಾವಣಗೆರೆ: ಮುಂಬರುವ ದಾವಣಗೆರೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಹಿತೈಷಿಗಳು, ಬೆಂಬಲಿಗರೊಂದಿಗೆ ದೀರ್ಘ ಸಮಾಲೋಚನೆ ನಡೆಸಲು ಫೆ. 27ಕ್ಕೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಬಲ ಟಿಕೆಟ್ ಆಕಾಂಕ್ಷಿಗಳೂ ಆದ ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಔಟ್ ರೀಚ್ ವಿಭಾಗದ ಕರ್ನಾಟಕ ರಾಜ್ಯ ಉಪಾಧ್ಯಕ್ಷ ವಿನಯ್ ಕುಮಾರ್ ಜಿ.ಬಿ. ಕಕ್ಕರಗೊಳ್ಳ ಅವರು ಮಹತ್ವದ ಸಭೆ ಕರೆದಿದ್ದಾರೆ.
ಮಂಗಳವಾರ ಬೆಳಿಗ್ಗೆ 11.30 ಕ್ಕೆ ಜಗಳೂರು ಪ್ರವಾಸಿ ಮಂದಿರ, ಮಧ್ಯಾಹ್ನ 3 ಗಂಟೆಗೆ ಹರಪನಹಳ್ಳಿ ಪ್ರವಾಸಿ ಮಂದಿರ ಹಾಗೂ ಸಂಜೆ 6 ಕ್ಕೆ ಹರಿಹರ ಪ್ರವಾಸಿ ಮಂದಿರದಲ್ಲಿ ಮಹತ್ವದ ಸಭೆ ಕರೆದಿರುವುದು ತೀವ್ರ ಕುತೂಹಲ ಕೆರಳಿಸಿದೆ.
ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಪ್ರಬಲ ಆಕಾಂಕ್ಷಿ ವಿನಯ್ ಕುಮಾರ್ ಅವರು ಸಭೆ ಕರೆದಿರುವುದು ಮಹತ್ವದ ಬೆಳವಣಿಗೆಯಾಗಿದೆ. ಸಭೆಯಲ್ಲಿ ಪಾಲ್ಗೊಂಡು ಲೋಕಸಭಾ ಕ್ಷೇತ್ರದ ಚುನಾವಣೆ ಹಾಗೂ ಆಗು ಹೋಗುಗಳ ಬಗ್ಗೆ ಚರ್ಚೆ ಹಾಗೂ ಸಮಾಲೋಚನೆ ನಡೆಸಲಿದ್ದಾರೆ.
ಈ ಮಹತ್ವದ ಸಭೆಗೆ ಆಯಾ ತಾಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ನಿಗದಿತ ಸಮಯಕ್ಕೆ ಹಾಜರಾಗಿ ಸಭೆ ಯಶಸ್ವಿಗೊಳಿಸುವಂತೆ ವಿನಯ್ ಕುಮಾರ್ ಮನವಿ ಮಾಡಿದ್ದಾರೆ.