SUDDIKSHANA KANNADA NEWS/ DAVANAGERE/ DATE:07-03-2025
ದಾವಣಗೆರೆ: ಸಿಎಂ ಸಿದ್ದರಾಮಯ್ಯ ಅವರ 16 ನೇ ಬಜೆಟ್ ಜನಪರ ಬಜೆಟ್ ಆಗಿದೆ ಎಂದು ಹಾಗೂ ದಾವಣಗೆರೆ ಜಿಲ್ಲೆಗೆ ಭರಪೂರ ಕೊಡುಗೆಗಳನ್ನು ಘೋಷಣೆ ಮಾಡಲಾದ ಬಜೆಟ್ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ಆಸ್ಪತ್ರೆ ಸೇರಿದಂತೆ ಇತರೆ ಜಿಲ್ಲೆಗಳ ಒಟ್ಟು 8 ತಾಲ್ಲೂಕು ಆಸ್ಪತ್ರೆಗಳನ್ನು 650 ಕೋಟಿ ರೂ ವೆಚ್ಚದಲ್ಲಿ ನವೀಕರಣಕ್ಕೆ ಬಜೆಟ್ ನಲ್ಲಿ ಮೀಸಲಿಡಲಾಗಿದೆ. ಬಂಜಾರ ಸಮುದಾಯದ ಪ್ರಮುಖ ಧಾರ್ಮಿಕ ಸ್ಥಳವಾದ ದಾವಣಗೆರೆ ಜಿಲ್ಲೆಯ ಸಂತ ಸೇವಾಲಾಲ್ ಪುಣ್ಯಕ್ಷೇತ್ರ ಸೂರಗೊಂಡನ ಕೊಪ್ಪದಲ್ಲಿ ಒಂದು ವಸತಿ ಶಾಲೆ ಪ್ರಾರಂಭಿಸಲು ಹಾಗೂ ಕೊಂಡಜ್ಜಿ ಬೆಟ್ಟದ ಪರಿಸರದಲ್ಲಿ ಸ್ಥಾಪಿಸಲಾಗಿರುವ ವೃತ್ತಿರಂಗಭೂಮಿ ರಂಗಾಯಣದಲ್ಲಿ 3.00 ಕೋಟಿ ರೂ ವೆಚ್ಚದಲ್ಲಿ ಮೂಲಭೂತ ಸೌಕರ್ಯ, ವೃತ್ತಿ ರಂಗಾಯಣ ಸಮುಚ್ಚಯ ಹಾಗೂ ಥಿಯೇಟರ್ ಮ್ಯೂಸಿಯಂ ನಿರ್ಮಾಣ ಮಾಡಲು ನಿರ್ಧಾರ ಮಾಡಲಾಗಿದೆ ಎಂದಿದ್ದಾರೆ.
ಜಿಲ್ಲೆಯ ಜನರ ನೀರಿನ ಬವಣೆ ನೀಗಿಸಲು ಜಗಳೂರು ಕೆರೆ ತುಂಬಿಸುವ ಯೋಜನೆ ಹಾಗೂ ಹೊನ್ನಾಳಿಯ ಬೆನಕನಹಳ್ಳಿ, ಗೋವಿನ ಕೋವಿ ಮತ್ತು ಹನುಮಸಾಗರ ಕೆರೆ ತುಂಬಿಸುವ ಯೋಜನೆಗೆ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ. ರಾಜ್ಯ ಸರ್ಕಾರವು ರೈಲ್ವೆ ಸಹಯೋಗದೊಂದಿಗೆ ತುಮಕೂರು-ದಾವಣಗೆರೆ ಸೇರಿದಂತೆ 9 ವಿವಿಧ ರೈಲ್ವೇ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ, ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ದಾವಣಗೆರೆ ಸೇರಿದಂತೆ ರಾಜ್ಯದ 31 ಜಿಲ್ಲೆಗಳಲ್ಲಿ 06ನೇ ತರಗತಿಯಿಂದ 12 ತರಗತಿವರೆಗಿನ ವಸತಿ ಶಾಲೆಗಳ ನಿರ್ಮಾಣ ಮಾಡಲು ಉದ್ದೇಶಿಸಿಲಾಗಿದೆ ಎಂದಿರುವ ಸಚಿವರು, ಪ್ರಸಕ್ತ ವರ್ಷದಿಂದ ದಾವಣಗೆರೆ ಕೇಂದ್ರ ವಲಯದಲ್ಲಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳಗಳನ್ನು ಸ್ಥಾಪನೆಗೆ ನಿರ್ಧರಿಸಲಾಗಿದೆ. ದಾವಣಗೆರೆ ಸೇರಿದಂತೆ ಇತರೆ 9 ಜಿಲ್ಲೆಗಳ ಒಟ್ಟು 60 ಸ್ಥಳಗಳಲ್ಲಿ 50 ಕೋಟಿ ರೂ ವೆಚ್ಚದಲ್ಲಿ ಆಧಾರಿತ ವಿದ್ಯುನ್ಮಾನ ಕ್ಯಾಮರಾ ಅಳವಡಿಸಲು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಘೋಷಿಸಿದ್ದಾರೆ ಎಂದು ತಿಳಿಸಿದ್ದಾರೆ.
2025-26 ನೇ ಸಾಲಿನ ಬಜೆಟ್ ನಲ್ಲಿ ದಾವಣಗೆರೆ ಜಿಲ್ಲೆಯ ಅಭಿವೃದ್ಧಿಗೆ ಮಾನ್ಯ ಮುಖ್ಯಮಂತ್ರಿಗಳಿಗೆ ಬೇಡಿಕೆಯನ್ನು ಸಲ್ಲಿಸಲಾಗಿತ್ತು. ಈ ಮೂಲಕ ಜಿಲ್ಲೆಯ ಅಭಿವೃದ್ದಿಗೆ ಮುಖ್ಯಮಂತ್ರಿಗಳು ಹಲವು ಯೋಜನೆಗಳನ್ನು ಹಾಗೂ ಕೊಡುಗೆಗಳನ್ನು ನೀಡಿದ್ದಾರೆ. ಮುಖ್ಯಮಂತ್ರಿಗಳಿಗೆ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸುವೆ ಎಂದು ಸಚಿವ ಎಸ್. ಎಸ್. ಮಲ್ಲಿಕಾರ್ಜುನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.