ಬೆಳಗಾವಿ: ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಜನರ ತಲಾದಾಯ ರಾಜ್ಯದ ಉಳಿದೆಡೆಗಳಿಗೆ ಹೋಲಿಸಿದರೆ ಕಡಿಮೆ ಇದೆ.
ಪೂರ್ಣ ಪ್ರಮಾಣದ ತಲಾದಾಯ ಕುರಿತ ವರದಿ ಲಭ್ಯ ಇರುವುದು 2023-24 ರ ಸಾಲಿನದು ಅದನ್ನು ಆಧರಿಸಿ ಹೇಳುವುದಾದರೆ ಅದರ ಪ್ರಕಾರ ರಾಜ್ಯದ ಜನರ ಸರಾಸರಿ ತಲಾದಾಯ ಪ್ರಸ್ತುತ ದರಗಳಲ್ಲಿ 3,39,813 ರೂ ಇದೆ. ಅದಕ್ಕಿಂತ ಮೇಲೆ 6 ಜಿಲ್ಲೆಗಳಿವೆ. ಬೆಂಗಳೂರು ನಗರ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ ಜಿಲ್ಲೆಗಳ ಜನರ ತಲಾದಾಯ 3.4 ಲಕ್ಷ ರೂಗಳಿಗಿಂತ ಹೆಚ್ಚು.
ಅದಕ್ಕೆ ಸಮೀಪದಲ್ಲಿ 10 ಜಿಲ್ಲೆಗಳಿವೆ. 2.5 ಲಕ್ಷದಿಂದ 3.4 ಲಕ್ಷದವರೆಗೆ ಮಂಡ್ಯ, ತುಮಕೂರು, ಕೊಡಗು, ಹಾಸನ, ಬಳ್ಳಾರಿ, ರಾಮನಗರ, ಉತ್ತರ ಕನ್ನಡ, ಧಾರವಾಡ, ಚಾಮರಾಜನಗರ, ಬಾಗಲಕೋಟೆ ಜಿಲ್ಲೆಗಳು.
2 ರಿಂದ 2.5 ಲಕ್ಷ ತಲಾದಾಯ ಇರುವ ಜಿಲ್ಲೆಗಳು 4. ಅವು, ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ, ದಾವಣಗೆರೆ.
2 ಲಕ್ಷಕ್ಕಿಂತ ಕಡಿಮೆ ಇರುವ ಜಿಲ್ಲೆಗಳು ಚಿತ್ರದುರ್ಗ, ಗದಗ, ಹಾವೇರಿ, ರಾಯಚೂರು, ವಿಜಯನಗರ, ವಿಜಯಪುರ, ಬೀದರ್, ಬೆಳಗಾವಿ, ಕೊಪ್ಪಳ, ಯಾದಗಿರಿ, ಕಲಬುರಗಿ ಸೇರಿ 11 ಇವೆ.
ನಾವು ತಲಾದಾಯವನ್ನು ಅಭಿವೃದ್ಧಿಯ ಮಾನದಂಡವಾಗಿರಿಸಿಕೊಳ್ಳುತ್ತೇವೆ. ತಲಾದಾಯವೆಂದರೆ ಒಟ್ಟಾರೆ ಆ ಜಿಲ್ಲೆಯ ಒಟ್ಟು ಉತ್ಪನ್ನವನ್ನು ಲೆಕ್ಕ ಹಾಕಿ ಅದನ್ನು ಆ ಜಿಲ್ಲೆಯ ಎಲ್ಲಾ ಜನರಿಗೆ ಡಿವೈಡ್ ಮಾಡಿದಾಗ ಸಿಗುವ ಮೌಲ್ಯವಾಗಿರುತ್ತದೆ. ಹೆಚ್ಚು ಇಂಡಸ್ಟಿçಯಲೈಸ್ ಆದ, ಕಮರ್ಷಿಯಲೈಸ್ ಆದ ಜಿಲ್ಲೆಗಳ ತಲಾದಾಯ ಹೆಚ್ಚಿರುತ್ತದೆ. ಹೆಚ್ಚು ಕೃಷಿಯನ್ನು ಅವಲಂಬಿಸಿದ ಜಿಲ್ಲೆಗಳಲ್ಲಿ ಕಡಿಮೆ ಇರುತ್ತದೆ.
ನಾಲ್ಕನೇ ಗುಂಪಿನ ಜಿಲ್ಲೆಗಳ ಸುಧಾರಣೆಗೆ ನಾವು ಹೆಚ್ಚು ಗಮನ ಹರಿಸಬೇಕಾಗಿದೆ. ಉತ್ತರ ಕರ್ನಾಟಕದ 14 ಜಿಲ್ಲೆಗಳಲ್ಲಿ 10 ಜಿಲ್ಲೆಗಳು ಹಾಗೂ ಚಿತ್ರದುರ್ಗ ಜಿಲ್ಲೆ ಕಡೆಯ ಕೆಟಗರಿಯಲ್ಲಿ ಬರುತ್ತವೆ. ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಜಿಲ್ಲಗಳ ತಲಾದಾಯವು 4 ನೇ ಗುಂಪಿನ ಜನರ ತಲಾದಾಯಕ್ಕೆ ಸಮೀಪದಲ್ಲೆ ಇದೆ.
ಆದರೂ ಉತ್ತರ ಕರ್ನಾಟಕದ 10 ಜಿಲ್ಲೆಗಳ ಜನರ ತಲಾದಾಯ ಅದರಲ್ಲೂ ಕಲ್ಯಾಣ ಕರ್ನಾಟಕದ ಜನರ ತಲಾದಾಯ ಕಡಿಮೆ ಇರಲು ಕಾರಣಗಳೇನು? ಎಂದು ಹುಡುಕುತ್ತಾ ಹೋದರೆ ಡೈರಿ ಚಟುವಟಿಕೆಗಳು ಎಲ್ಲಿ ದುರ್ಬಲವಾಗಿವೆಯೋ ಅಲ್ಲಿಯೇ ತಲಾದಾಯವೂ ಕಡಿಮೆ ಇದೆ. ನೀವು ಸಲಹೆ ಕೊಡಬೇಕಾಗಿವುದು ಇಂಥ ವಿಚಾರಗಳನ್ನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.





Leave a comment