SUDDIKSHANA KANNADA NEWS/DAVANAGERE/DATE:19_12_2025
ಬೆಳಗಾವಿ: ಉತ್ತರ ಕರ್ನಾಟಕ ಉದ್ಧಾರಕ್ಕೆ ರಾಜ್ಯ ಸರ್ಕಾರದ ಕೊಡುಗೆ ಅಪಾರ. ಇಷ್ಟನ್ನೂ ಮಾಡಿದ್ದು ಯಾರು? ಕಾಂಗ್ರೇಸ್ ನೇತೃತ್ವದ ಸರ್ಕಾರಗಳೆ. ಇದೆಲ್ಲ ಸಾಧ್ಯವಾಗಿರುವುದು ನಮ್ಮ ಸರ್ಕಾರಗಳಿಂದಲೇ. ಕಳೆದ 20 ವರ್ಷಗಳಲ್ಲಿ ನೀವು ಸುಮಾರು 11 ವರ್ಷಗಳ ಕಾಲ ಅಧಿಕಾರದಲ್ಲಿ ಇದ್ರಿ. ಉತ್ತರ ಕರ್ನಾಟಕಕ್ಕೆ ನಿಮ್ಮ ಕೊಡುಗೆ ಏನು? ಅಧಿಕಾರಕ್ಕೆ ಬರುವುದಕ್ಕೆ ಮೊದಲು ನಿಮಗೆ ಉತ್ತರ ಕರ್ನಾಟಕ ನೆನಪಾಗುತ್ತದೆ. ಅಧಿಕಾರದಲ್ಲಿದ್ದಾಗ ನಿಮಗೆ ಉತ್ತರ ಕರ್ನಾಟಕ ಇದೆ. ಅದರ ಹಿತಾಸಕ್ತಿ ಕಾಪಾಡಬೇಕು ಎಂದು ಅನ್ನಿಸುವುದೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದರು.
ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕಕ್ಕೆ ಬಿಜೆಪಿಯವರ ಕೊಡುಗೆ ಏನು ಎಂದು ಹೇಳಬೇಕು? ಎಷ್ಟು ಸಂಸ್ಥೆಗಳನ್ನು ಪ್ರಾರಂಭಿಸಲಾಗಿದೆ? ಐಐಎಂಗಳು, ಏಮ್ಸ್ ಆಸ್ಪತ್ರೆಗಳು, ಇಎಸ್ಐ ಆಸ್ಪತ್ರೆಗಳು, ಕೇಂದ್ರದ ಕೈಗಾರಿಕೆಗಳು, ವಿಶ್ವ ವಿದ್ಯಾಲಯಗಳು, ನೀರಾವರಿ ಯೋಜನೆಗಳು ಮುಂತಾದಂತೆ ಏನನ್ನು ಸ್ಥಾಪಿಸಲಾಗಿದೆ ಎಂಬುದನ್ನು ಹೇಳಬೇಕು? ಮೋದಿ ಸರ್ಕಾರದಲ್ಲಿ ಪ್ರಹ್ಲಾದ ಜೋಶಿಯವರು ನಿರಂತರವಾಗಿ ಸಚಿವರಾಗಿ ಕೆಲಸ ಮಾಡುತ್ತಿದ್ದಾರೆ. ಬೆಳಗಾವಿ ಕಂದಾಯ ವಿಭಾಗದ ಲೋಕಸಭಾ ಕ್ಷೇತ್ರಗಳಿಂದ ಆಯ್ಕೆಯಾಗುವ ಎಂಪಿಗಳು ಬಹುತೇಕರು ಬಿಜೆಪಿಯವರು. ಬೆಳಗಾವಿ, ಧಾರವಾಡ, ಹಾವೇರಿ-ಗದಗ,
ಬಾಗಲಕೋಟೆ, ವಿಜಯಪುರ ಜಿಲ್ಲೆಗಳಿಂದ ಆಯ್ಕೆಯಾಗಿರುವವರು ಯಾರು? ಇಷ್ಟಿದ್ದರೂ ಕೇಂದ್ರ ಸರ್ಕಾರದ ಕೊಡುಗೆ ಏನು? ಎಂದು ಪ್ರಶ್ನಿಸಿದರು.
ಪ್ರತಿ ಚುನಾವಣೆಯ ಸಂದರ್ಭದಲ್ಲೂ ಜನರಿಗ ಮೋಸ ಮಾಡುತ್ತಲೇ ಇದ್ದಾರೆ. ಡಬಲ್ ಎಂಜಿನ್ ಸರ್ಕಾರ ಇದ್ದರೆ ಅನುಕೂಲ ಎಂದು ಹೇಳುವುದು ಮಾಮೂಲಿ ಮಾತು. ಆದರೆ 2019 ರಿಂದ 2023 ರವರೆಗೆ ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರವೆ ಇದ್ದದ್ದು. ಆ ಸಂದರ್ಭದಲ್ಲಿಯಾದರೂ ಏನಾದರೂ ಯೋಜನೆಗಳನ್ನು ಈ ಭಾಗಕ್ಕೆ ಕೊಟ್ರಾ? ಈ ಭಾಗ ಅಷ್ಟೆ ಅಲ್ಲ ರಾಜ್ಯಕ್ಕೆ ಏನಾದ್ರೂ ಮಾಡಿದ್ರಾ? ಉತ್ತರ ಕರ್ನಾಟಕದ ಬಗ್ಗೆಯಾಗಲಿ, ಕರ್ನಾಟಕದ ಬಗ್ಗೆಯಾಗಲಿ ಮಾತಾಡುವ ನೈತಿಕತೆ ಎಲ್ಲಿದೆ ನಿಮಗೆ? ಎಂದು ಪ್ರಶ್ನಿಸಿದರು.
ಕೇಂದ್ರ ಸರ್ಕಾರಕ್ಕೆ ಈ ವರೆಗೆ ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೆ ಹಂತದ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಲಾಗಿಲ್ಲ. ಮಹದಾಯಿ ಯೋಜನೆಯನ್ನು ಇತ್ಯರ್ಥ ಪಡಿಸಲಾಗಿಲ್ಲ. ನಿಮಗೆ ನೈತಿಕತೆ ಇಲ್ಲವೆಂದು ಹೇಳಿ ನಿಮಗೆ ನಾವು ಸುಮ್ಮನಿರುವುದಿಲ್ಲ. ನಮಗೆ ನೈತಿಕತೆಯಿದೆ. ನಾವು ಸಮಗ್ರ ಕರ್ನಾಟಕವನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ. ಈ ಭಾಗದ ಶಿಕ್ಷಣ, ಆರೋಗ್ಯ, ಮೂಲಭೂತ ಸೌಕರ್ಯ, ಕೈಗಾರಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದೇವೆ ಎಂದು ತಿಳಿಸಿದರು.





Leave a comment