SUDDIKSHANA KANNADA NEWS/ DAVANAGERE/ DATE:22-03-2024
ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರು ಗೆದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಚನ್ನಗಿರಿ ಶಾಸಕ ಬಸವರಾಜ್ ವಿ. ಶಿವಗಂಗಾ ಸವಾಲು ಹಾಕಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಸೋತರೆ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧಿನಿದ್ದೇನೆ. ಯಾರಿಗೆ ಟಿಕೆಟ್ ಕೊಟ್ಟರೂ ನಮ್ಮ ಅಭ್ಯಂತರವಿಲ್ಲ. ಬಿಜೆಪಿಯಲ್ಲಿ ನಡೆಯುತ್ತಿರುವ ಭಿನ್ನಮತೀಯ ಚಟುವಟಿಕೆ ಕೇವಲ ನಾಟಕವಷ್ಟೇ. ಮಾಜಿ ಸಚಿವ ಎಂ. ಪಿ. ರೇಣುಕಾಚಾರ್ಯ ಅವರು ತಾಕತ್ತಿದ್ದರೆ ಈಗ ಘೋಷಿಸಿರುವ ಬಿಜೆಪಿ ಅಭ್ಯರ್ಥಿ ಗೆಲ್ಲಿಸಿಕೊಂಡು ಬರಲಿ. ಭಿನ್ನಮತೀಯ ಚಟುವಟಿಕೆ ನಡೆಸುವುದನ್ನು ಬಿಟ್ಟು ಅವರ ಪಕ್ಷದ ಅಭ್ಯರ್ಥಿ ಗೆಲ್ಲಿಸಲಿ ನೋಡೋಣ ಎಂದು ರೇಣುಕಾಚಾರ್ಯ ಅವರಿಗೆ ಪಂಥಾಹ್ವಾನ ನೀಡಿದರು.
ಈ ಭಿನ್ನಮತ ಮಾಡುವ ರೇಣುಕಾಚಾರ್ಯ ಹಾಗೂ ತಂಡದವರಿಗೆ ತಾಕತ್ ಇದ್ದರೇ ಬಿಜೆಪಿ ಗೆಲ್ಲಿಸಲಿ. ಬಿಜೆಪಿಯವರು ಈಗಾಗಲೇ ಸೋಲು ಒಪ್ಪಿಕೊಂಡಿದ್ದಾರೆ. ಹೀಗೆ ಒಪ್ಪಿಕೊಂಡು ಅವರವರೇ ಭಿನ್ನಮತ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಇದೆ ತಾಯಂದಿರು ಕಾಂಗ್ರೆಸ್ ಅಭ್ಯರ್ಥಿಗೆ ಆರ್ಶಿವಾದ ಮಾಡುತ್ತಾರೆ. ಕಾಂಗ್ರೆಸ್ ನಲ್ಲಿ ಕತ್ತೆಗೆ ಟಿಕೇಟ್ ನೀಡಿದರೂ ನಾವು ಬೆಂಬಲ ಕೊಡುತ್ತೇವೆ. ಕತ್ತೆಯನ್ನು ನಿಲ್ಲಿಸಿದರೂ ನಾವು ಮತ ಹಾಕುತ್ತೇವೆ ಎಂದು ಹೇಳಿದರು.
ನಾವು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರಿಗೆ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷವು ಟಿಕೆಟ್ ನೀಡುವಂತೆ ಮನವಿ ಮಾಡಿಕೊಂಡಿದ್ದೆವು. ಈಗ ಅವರ ಪತ್ನಿಗೆ ಸಿಕ್ಕಿರುವುದರಿಂದ ಕಾಂಗ್ರೆಸ್ ಗೆ ಅನುಕೂಲವಾಗಲಿದೆ. ನಾವು ಅಭ್ಯರ್ಥಿ ಅನ್ನುವುದಕ್ಕಿಂತ ಕಾಂಗ್ರೆಸ್ ಎಂದು ಕೆಲಸ ಮಾಡುತ್ತೇವೆ ಎಂದು ಶಾಸಕ ಶಿವಗಂಗಾ ಬಸವರಾಜ್ ತಿಳಿಸಿದರು.